ಮನೆ ಅಪರಾಧ ವಿವಾಹ ಸಮಾರಂಭದಲ್ಲಿ ಬಾವಿಗೆ ಬಿದ್ದು 13 ಮಂದಿ ದುರ್ಮರಣ

ವಿವಾಹ ಸಮಾರಂಭದಲ್ಲಿ ಬಾವಿಗೆ ಬಿದ್ದು 13 ಮಂದಿ ದುರ್ಮರಣ

0

ಖುಷಿನಗರ: ಮದುವೆ ಸಮಾರಂಭಕ್ಕೆಂದು ಬಂದಿದ್ದ ಮಹಿಳೆಯರು ಹಾಗೂ ಮಕ್ಕಳು ಬಾವಿಯಲ್ಲಿ 13 ಮಂದಿ ಸಾವನ್ನಪ್ಪಿರುವ ಘಟನೆ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. 

ವಿವಾಹದ ಸಂದರ್ಭದಲ್ಲಿ ಗಂಗೆ ಪೂಜೆಗೆಂದು ಬಾವಿ ಬಳಿ ನೂರಾರು ಜನರು ಸೇರಿದ್ದಾರೆ. ಕೆಲವ ಮಹಿಳೆಯರು ಹಾಗೂ ಮಕ್ಕಳು ಗಂಗೆ ಪೂಜೆಯನ್ನು ಬಾವಿಯ ಮೇಲ್ಚಾವಣಿ ಮೇಲೆ ಕುಳಿತು ನೋಡುತ್ತಿದ್ದರು. ಬಾವಿಯು ಹಳೆಯದಾಗಿದ್ದು, ಮೇಲ್ಚಾವಣಿ ದುರ್ಬಲವಾಗಿದ್ದರಿಂದ ಕುಸಿದು ಬಿದ್ದಿದೆ. ಪರಿಣಾಮ ಮೇಲ್ಚಾವಣಿ ಮೇಲೆ ಕುಳಿತಿದ್ದ ಮಹಿಳೆಯರು ಹಾಗೂ ಮಕ್ಕಳು ಬಾವಿಗೆ ಬಿದ್ದಿದ್ದಾರೆ. ಬಳಿಕ ಬಾವಿಯೊಳಗೆ ಬಿದ್ದ ತಮ್ಮ ಕುಟುಂಬಸ್ಥರನ್ನು ಕಾಪಾಡಲು ಒಬ್ಬರ ಹಿಂದೆ ಒಬ್ಬರು ಮಹಿಳೆಯರು ಬಾವಿಗೆ ಹಾರಿದ್ದಾರೆ. ಹೀಗೆ ಸುಮಾರು 25ಕ್ಕೂ ಹೆಚ್ಚು ಮಂದಿ ಮಹಿಳೆಯರು ಬಾವಿಗೆ ಬಿದ್ದಿದ್ದಾರೆ. 

ಬಳಿಕ ಸ್ಥಳದಲ್ಲಿದ್ದವರು ಕೆಲವರನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಘಟನೆಯಲ್ಲಿ 9 ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 18 ಮಂದಿ ಮಹಿಳೆಯರಿಗೆ ಗಂಭೀರವಾಗಿ ಗಾಯವಾಗಿದ್ದು, ಕೂಡಲೇ ಗ್ರಾಮಸ್ಥರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಗ್ರಾಮಸ್ಥರೊಂದಿಗೆ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸದರು. ಬಳಿಕ ಜಿಲ್ಲಾಧಿಕಾರಿ, ಪೊಲೀಸ್​ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಆ್ಯಂಬುಲೆನ್ಸ್​ ಘಟನಾಸ್ಥಳಕ್ಕೆ ತಲುಪಲು ಸುಮಾರು 2 ಗಂಟೆಗಳ ಕಾಲ ತಡವಾಗಿತ್ತು. ಅದಕ್ಕೂ ಮೊದಲು ಬಂದ ಪೊಲೀಸರು ತಮ್ಮ ವಾಹನದಲ್ಲಿ ಕೆಲ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. 

ಈ ನಡುವೆ ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಹಿರಿಯ ಅಧಿಕಾರಿಗಳು ಮೃತರ ಕುಟಂಬಕ್ಕೆ ತಲಾ ರೂ.4 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಹಿಂದಿನ ಲೇಖನಮಾಜಿ ಶಾಸಕ ಜಿ.ವಿ.ಮಂಟೂರ ನಿಧನ
ಮುಂದಿನ ಲೇಖನದೇಶದಲ್ಲಿಂದು 30,757 ಹೊಸ ಕೊರೊನಾ ಕೇಸ್ ಪತ್ತೆ