ಮನೆ ಸುದ್ದಿ ಜಾಲ ಸೆ.8 ರಿಂದ 14ರವರೆಗೆ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ

ಸೆ.8 ರಿಂದ 14ರವರೆಗೆ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ

0

ಮೈಸೂರು(Mysuru): ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕೆಆರ್‌ವಿಪಿ) ವತಿಯಿಂದ 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನವನ್ನು ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೆ.8ರಿಂದ 10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಸಂಯೋಜಕ ಎ.ಎನ್.ಮಹೇಶ್‌ ತಿಳಿಸಿದರು.

ಇಂದು ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಖ್ಯಾತ ವಿಜ್ಞಾನಿ ಎ.ಎಸ್. ಕಿರಣ್‌ಕುಮಾರ್‌ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಸರ್ವಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಬರ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸೆ.8ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಉದ್ಘಾಟಿಸಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ.  ಎಂದು ತಿಳಿಸಿದರು.

ಪರಿಷತ್ತಿನ ಜಿಲ್ಲಾ ಸಮಿತಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಕೆಎಸ್‌ಒಯು ಹಾಗೂ ಮೈಸೂರು ವಿಶ್ವವಿದ್ಯಾಲಯ ಸಹಯೋಗ ನೀಡಿವೆ ಎಂದು ಮಾಹಿತಿ ನೀಡಿದರು.

8 ಗೋಷ್ಠಿ, 17 ಉಪನ್ಯಾಸ: 8 ಗೋಷ್ಠಿಗಳು ಹಾಗೂ ಪರಿಣತರಿಂದ 17 ಉ‍ಪನ್ಯಾಸಗಳಿರಲಿವೆ. ವಿಜ್ಞಾನ ಜನಪ್ರಿಯಗೊಳಿಸಲು ಶ್ರಮಿಸಿದ ನಾಲ್ವರಿಗೆ ಕೆಆರ್‌ವಿಪಿ ಸಂಸ್ಥಾ‍ಪಕ ಅಧ್ಯಕ್ಷ ಎಚ್.ನರಸಿಂಹಯ್ಯ ಅವರ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆ ನಡೆದಿದೆ. ಗೋಷ್ಠಿಗಳ ಪ್ರಮುಖಾಂಶಗಳನ್ನು ಸೇರಿಸಿ ಸ್ಮರಣ ಸಂಚಿಕೆ ಹೊರತರಲಾಗುವುದು. ಇದೇ ಮೊದಲ ಬಾರಿಗೆ ನಿರ್ಣಯಗಳನ್ನು ಕೈಗೊಂಡು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಪಾಲ್ಗೊಳ್ಳಲು ಬಯಸುವವರು ₹ 250 ಪಾವತಿಸಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ:984405284 (ಸಿ.ಕೃಷ್ಣೇಗೌಡ) ಸಂಪರ್ಕಿಸಬಹುದು ಎಂದು ತಿಳಿಸಿದರು.

ಕೆಆರ್‌ವಿಪಿಯ ಗೌರವ ಕಾರ್ಯದರ್ಶಿ ಸಿ.ಕೃಷ್ಣೇಗೌಡ, ಖಜಾಂಚಿ ಈ.ಬಸವರಾಜು, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಹರಿಪ್ರಸಾದ್, ಕೃಷ್ಣಮೂರ್ತಿ ರಾಜ್‌ ಅರಸ್, ಜಿಲ್ಲಾ ಸಮಿತಿ ಕಾರ್ಯದರ್ಶಿ ಜಿ.ಬಿ.ಸಂತೋಷ್‌ಕುಮಾರ್‌ ಮತ್ತು ಜಿಲ್ಲಾ ಸಮಿತಿ ಸದಸ್ಯ ಮುರಳೀಧರ್ ಇದ್ದರು.

ಹಿಂದಿನ ಲೇಖನದಸರಾ ಕವಿಗೋಷ್ಟಿ: ಡಾ.ಚಂದ್ರಶೇಖರ ಕಂಬಾರರಿಂದ ಉದ್ಘಾಟನೆ
ಮುಂದಿನ ಲೇಖನಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ: ಸಿಬಿಐ ತನಿಖೆಗೆ ಶಾಸಕ ಎ.ಮಂಜುನಾಥ್ ಆಗ್ರಹ