ಮನೆ ಕಾನೂನು ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

0

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರುವಾರ ಆದೇಶ ನೀಡಿದೆ.

Join Our Whatsapp Group

ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸುರೇಶ್‌ಬಾಬು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಅಲ್ಲದೆ, ಮುಂದಿನ ವಿಚಾರಣೆವರೆಗೂ ಹೆಚ್.ಡಿ.ಕುಮಾರಸ್ವಾಮಿಗೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ. ಜೊತೆಗೆ, ಈ ಎಫ್‌ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತಿಲ್ಲ ಎಂದು ಆದೇಶಿಸಿತು.

ಪ್ರಕರಣವೇನು?: ನಿಯಮ ಉಲ್ಲಂಘಿಸಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಹೆಚ್‌ಡಿಕೆ, ಚಂದ್ರಶೇಖರ್ ವಿರುದ್ಧ ಹರಿಹಾಯ್ದಿದ್ದರು. ಬಳಿಕ ಎಡಿಜಿಪಿ ಚಂದ್ರಶೇಖರ್ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳು ದುರುದ್ದೇಶಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಚಂದ್ರಶೇಖರ್ ದೂರಿನಲ್ಲಿ ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡ ಸುರೇಶ್‌ಬಾಬು ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್‌ಐಆರ್ ದಾಖಲಿಸಲಾಗಿದೆ.