ಮನೆ ರಾಜ್ಯ ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸೂಚನೆ: ಸಚಿವ ಜಿ ಪರಮೇಶ್ವರ್

ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸೂಚನೆ: ಸಚಿವ ಜಿ ಪರಮೇಶ್ವರ್

0

ಬೆಂಗಳೂರು: “ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ” ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

Join Our Whatsapp Group

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಒಂದು ಸಮುದಾಯವನ್ನು ನಿಂದಿಸಿ, ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈತನನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ” ಎಂದರು.

“ಈ ವ್ಯಕ್ತಿಯನ್ನು ತಮ್ಮ ವಶಕ್ಕೆ ನೀಡಿ ನಾವು ಆತನಿಗೆ ಬುದ್ಧಿ ಕಲಿಸುತ್ತೇವೆ ಎಂದು ಒಂದು ಸಮುದಾಯದ ಜನರು ಉದಯಗಿರಿ ಪೊಲೀಸ್ ಠಾಣೆ ಮುಂದೆ ಗಲಾಟೆ ನಡೆಸಿದ್ದಾರೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಗಲಾಟೆ ನಡೆಸಿ ಕಲ್ಲು ತೂರಿದವರ ವಿರುದ್ಧವೂ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಘಟನಾ ಸ್ಥಳಕ್ಕೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರನ್ನು ಕಳುಹಿಸಿದ್ದೇನೆ. ಅವರು ಅಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಹಾಗೆಯೇ ಟಿ. ನರಸೀಪುರದಲ್ಲಿ ನಡೆದಿರುವ ಕುಂಭಮೇಳದ ಭದ್ರತೆಯನ್ನು ಅವರು ಪರಿಶೀಲಿಸಲಿದ್ದಾರೆ” ಎಂದು ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯವನ್ನು ತುಷ್ಟೀಕರಿಸುವ ನೀತಿಯಿಂದ ಈ ರೀತಿಯ ಘಟನೆಗಳಾಗುತ್ತಿವೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಉತ್ತರಿಸಿ, “ಬಿಜೆಪಿಯವರು ಎಲ್ಲಾ ಸಂದರ್ಭದಲ್ಲೂ ಈ ರೀತಿ ಮಾತನಾಡುವುದು ಸರಿಯಲ್ಲ. ಹೀಗೆ ಮಾತನಾಡುವುದನ್ನು ಬಿಟ್ಟರೆ ಅವರಿಗೆ ಬೇರೆ ಅಜೆಂಡಾ ಇಲ್ಲ” ಎಂದು ತಿರುಗೇಟು ನೀಡಿದರು.

ಘಟನಾ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭೇಟಿ ನೀಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, “ಅಶೋಕ್ ಭೇಟಿ ನೀಡಲಿ, ಯಾವ ಸಲಹೆ ಕೊಡುತ್ತಾರೋ ಅದನ್ನು ಪಾಲಿಸುತ್ತೇವೆ. ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ. ಈ ಘಟನೆಯಲ್ಲಿ ಪೊಲೀಸರ ಲೋಪಗಳಿದ್ದರೆ ಅವರ ವಿರುದ್ಧವೂ ಕ್ರಮ ಆಗುತ್ತದೆ. ಈ ಹಿಂದೆಯೆಲ್ಲಾ ಪೊಲೀಸರ ವಿರುದ್ಧವೂ ಕ್ರಮ ಆಗಿದೆ” ಎಂದು ಹೇಳಿದರು.

“ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ದೆಹಲಿಗೆ ಏಕೆ ಭೇಟಿ ನೀಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ, ಆ ಕುರಿತು ಅವರನ್ನೇ ಕೇಳಿ. ನಾನು ದೆಹಲಿಗೆ ಹೋಗುವಾಗ ನಿಮಗೆ ಹೇಳಿಯೇ ಹೋಗುತ್ತೇನೆ. ಎರಡು ದಿನದ ಹಿಂದೆ ಸಹ ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೆ. ನಾವು ಸಚಿವರುಗಳಿದ್ದೇವೆ. ಹಾಗಾಗಿ ಭೇಟಿ ಮಾಡಿ ಮಾತನಾಡುವುದು ತಪ್ಪೇನಲ್ಲ. ಹೈಕಮಾಂಡ್ ಬಹಿರಂಗವಾಗಿ ಏನನ್ನು ಮಾತನಾಡಬೇಡಿ ಎಂದಿದೆ. ಹಾಗಾಗಿ ನಾವು ಬಹಿರಂಗವಾಗಿ ಏನನ್ನೂ ಮಾತನಾಡುತ್ತಿಲ್ಲ. ಸಭೆ ಸೇರುವುದು ಎಲ್ಲವೂ ನಡೆದಿದೆ. ಇದಕ್ಕೆಲ್ಲಾ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದರು.