ಬೆಂಗಳೂರು: “ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
“ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ” ಎಂದಿದ್ದಾರೆ.
“ನಾಡಿನ ಪ್ರತಿಯೊಬ್ಬ ಪ್ರಜೆಯನ್ನೂ ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ” ಎಂದು ಹೇಳಿದ್ದಾರೆ.
ಬಜೆಟ್ ತಯಾರಿಯ ಕುರಿತ ಒಂದು ವಿಡಿಯೋ ಪೋಸ್ಟ್ ಮಾಡಿರುವ ಅವರು ಅದಕ್ಕೆ, “ಜನರಿಂದ ಜನರಿಗಾಗಿ ಜನರಿಗೋಸ್ಕರ. ಇದು ಜನಪರ ಬಜೆಟ್ನ ಮೂಲಮಂತ್ರ” ಎಂಬ ಶೀರ್ಷಿಕೆ ಕೊಟ್ಟಿದ್ದಾರೆ.














