ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿರುವ ಸಮಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಕ್ಕರಂಗಡಿ ಬಳಿ ವ್ಯಕ್ತಿಯೊಬ್ಬರ ಮೇಲೆ ತಲ್ವಾರ್ನಿಂದ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯ ನಿವಾಸಿ ಹಮೀದ್ ಹಲ್ಲೆಗೊಳಗಾದ ವ್ಯಕ್ತಿ. ಶುಕ್ರವಾರ ಸಂಜೆ ವೇಳೆಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾಗಿರುವ ಹಮೀದ್ನನ್ನ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಗಳೂರು ಪ್ರವಾಸದಲ್ಲಿದ್ದರು. ಇಲ್ಲಿನ ನೂತನ ಜಿಲ್ಲಾಧಿಕಾರಿ ಕಚೇರಿ, ಡಿಸಿ ಕಚೇರಿಯ ನಾಮಫಲಕ ಉದ್ಘಾಟಿಸಿ ಹಲವು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಜೊತೆಗೆ ವಿವಿಧ ಇಲಾಖೆಗಳ ಸರ್ಕಾರಿ ಸವಲತ್ತುಗಳನ್ನು ಸಾರ್ವಜನಿಕರಿಗೆ ವಿತರಿಸಿದ್ದರು. ಈ ಹೊತ್ತಿನಲ್ಲೇ ಬಂಟ್ವಾಳದಲ್ಲಿ ಅಹಿತಕರ ಘಟನೆ ನಡೆದಿದೆ.
ಮೇಲ್ನೋಟಕ್ಕೆ ಹ್ಯಾರಿಸ್ ಎಂಬಾತನ ಗ್ಯಾಂಗ್ನಿಂದ ವೈಯಕ್ತಿಕ ದ್ವೇಷಕ್ಕೆ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.














