ಮೈಸೂರು(Mysuru): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂನ್ 21 ರಂದು ನಡೆಯಲಿರುವ ರ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ಮೋದಿ ಅವರ ಯೋಗ ಕಾರ್ಯಕ್ರಮದ ವೇದಿಕೆಯಲ್ಲಿ ಪಾಲ್ಗೊಳ್ಳುವ ಅತಿಥಿಗಳ ಬಗೆಗೆನ ಭಿನ್ನಾಭಿಪ್ರಾಯ ಕೊನೆಗೊಂಡಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಮೈಸೂರು ಜಿಲ್ಲಾಡಳಿತ ಪ್ರಧಾನಿ ಮೋದಿ ಅವರ ಜತೆ ವೇದಿಕೆಯಲ್ಲಿ ಯೋಗ ಮಾಡಲು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನ ನೀಡಿದೆ.
ಈ ಹಿಂದೆ ಯೋಗ ವೇದಿಕೆಗೆ ಐವರಿಗೆ ಮಾತ್ರ ಅವಕಾಶ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿತ್ತು. ಪ್ರಧಾನಮಂತ್ರಿ, ಸಿಎಂ, ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ ಹಾಗೂ ಕೇಂದ್ರ ಆಯುಷ್ ಮಂತ್ರಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದು, ಇದೀಗ ರಾಜ್ಯ ಸರ್ಕಾರ ಗಣ್ಯರ ಪಟ್ಟಿಯಲ್ಲಿ ಯದುವೀರ್ ಹಾಗೂ ಪ್ರಮೋದಾದೇವಿ ಅವರ ಹೆಸರು ಸೇರಿಸಿದೆ.
ಯೋಗಾಭ್ಯಾಸದ ನಂತರ ಮೈಸೂರು ಅರಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅರಮನೆಗೆ ಭೇಟಿ ನೀಡಲಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಅರಮನೆಯಲ್ಲಿ ರಾಜ ವಂಶಸ್ಥರ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ.