ಬೆಂಗಳೂರು: ಕರ್ನಾಟಕದ ಭ್ರಷ್ಟಕುಳಗಳಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ವಿವಿಧ ಕಡೆ ಏಕಕಾಲದಲ್ಲಿ ರೇಡ್ ಮಾಡಿದ್ದಾರೆ.
ಚಿತ್ರದುರ್ಗ, ಹಾಸನ, ಕೊಡಗು ಸೇರಿದಂತೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಈ ವೇಳೆ ಅಪಾರ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದ್ದು, ಅಧಿಕಾರಿಗಳ ತಂಡ ತೀವ್ರ ತಪಾಸಣೆ ನಡೆಸಿದೆ.
ಪ್ರಮುಖವಾಗಿ ಚಿತ್ರದುರ್ಗ ಜಿಲ್ಲೆಯ ಟಿಹೆಚ್ ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಆದಾಯಕ್ಕೂ ಮೀರಿದ ಅಸ್ತಿ, ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟಿಹೆಚ್ ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಎಸ್.ಪಿ. ವಾಸುದೇವರಾಮ್, ಡಿವೈಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಕ್ಲಿನಿಕ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ಮತ್ತೊಂದೆಡೆ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ಅಧಿಕಾರಿಗಳ ತಂಡ ತಲಾಶ್ ಮಾಡ್ತಿದೆ.
ಇನ್ನು ಕೊಡಗು ಜಿಲ್ಲೆಯ ಕುಶಾಲನಗರದ ಫಾರ್ಮ್ ಹೌಸ್ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗಿದೆ.
ಹಾಸನ ನಗರದ ಚನ್ನಪಟ್ಟಣ ಹೌಸಿಂಗ್ ಬೋರ್ಡ್ನಲ್ಲಿರುವ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಇಂಜಿನಿಯರ್ ಎಂ.ಆಂಜನೇಯಮೂರ್ತಿ ಮನೆ, ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಎಂ.ಆಂಜನೇಯಮೂರ್ತಿ ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್ ಆಗಿದ್ದಾರೆ. ಆಂಜನೇಯಮೂರ್ತಿ ಅವರ ಯಲಹಂಕದ ಮನೆ, ಜಕ್ಕೂರು ಕಾಂಪ್ಲೇಕ್ಸ್, ತುಮಕೂರು, ಮಧುಗಿರಿ ಸೇರಿದಂತೆ ಗೌರಿಬಿದನೂರು ಕಚೇರಿಗಳ ಮೇಲೆಯೂ ದಾಳಿ ನಡೆದಿದೆ.
ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆ ಈ ಅಧಿಕಾರಿಗಳ ಮನೆಗೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದು, ಈ ವೇಳೆ ಅಧಿಕಾರಿಗಳ ದೊಡ್ಡ ದೊಡ್ಡ ಬಂಗಲೆಗಳು, ಕೆಜಿಗಟ್ಟಲೆ ಚಿನ್ನಾಭರಣ, ಅಪಾರ ಪ್ರಮಾಣದ ಜಮೀನುಗಳ ದಾಖಲೆಗಳು ಪತ್ತೆಯಾಗಿವೆ.
ಇನ್ನು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭ್ರಷ್ಟ ಪೊಲೀಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಕೇಸ್ ವೊಂದರಲ್ಲಿ ಬಿ ರಿಪೋರ್ಟ್ ಹಾಕಲು ಹಣ ಪಡೆಯುವಾಗ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಎಂಬುವವರು ಕೇಸ್ ವೊಂದರಲ್ಲಿ ಬಿ ರಿಪೋರ್ಟ್ ಹಾಕುವುದಕ್ಕೆ ಮೊಹಮ್ಮದ್ ಯೂನಸ್ ಎಂಬುವವರ ಬಳಿ 1.25 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಆದರೆ ಮೊಹಮ್ಮದ್ ಯೂನಸ್ ಅವರು ಈ ಬಗ್ಗೆ ಲೋಕಾಯುಕ್ತಗೆ ದೂರು ನೀಡಿದ್ದರು. ಅದರಂತೆ ಇದೀಗ ಯೂನಸ್ ನೀಡಿರುವ ದೂರಿನ ಮೇರೆಗೆ ಸಾವಿತ್ರಿ ಬಾಯಿಯವರನ್ನು ಟ್ರ್ಯಾಪ್ ಮಾಡಲಾಗಿದೆ.














