ಮನೆ ಸುದ್ದಿ ಜಾಲ ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ

0

ಶಿಮ್ಲಾ : ಪ್ರವಾಹ ಮತ್ತು ಭೂಕುಸಿತಗಳಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದರು. ಕಾಂಗ್ರಾ ಜಿಲ್ಲೆಯ ಗಗ್ಗಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯನ್ನು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹಾಗೂ ಅಧಿಕಾರಿಗಳು ಬರಮಾಡಿಕೊಂಡರು.

ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ಪ್ರಧಾನಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಮನೆಗಳು, ರಸ್ತೆಗಳು ಮತ್ತು ಮೂಲಸೌಕರ್ಯಗಳಿಗೆ ಆಗಿರುವ ವ್ಯಾಪಕ ಹಾನಿಯನ್ನು ಅವಲೋಕಿಸಿದರು. ಬಳಿಕ ಪ್ರವಾಹದಿಂದ ಹಾನಿಗೊಳಗಾದ ನಿವಾಸಿಗಳೊಂದಿಗೆ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ತಮ್ಮ ಭೇಟಿಯ ಸಮಯದಲ್ಲಿ ಮೋದಿ ರಾಜ್ಯಾದ್ಯಂತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯನ್ನು ಭೇಟಿಯಾದರು.

ಇಂದು ಮಧ್ಯಾಹ್ನ 1:30ರ ಸುಮಾರಿಗೆ ಪ್ರಧಾನಿ ಮೋದಿ ಕಾಂಗ್ರಾಗೆ ಆಗಮಿಸಿದ್ದಾರೆ. ನಂತರ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ವೇಳೆ ಕಳೆದ ವಾರದ ಭಾರೀ ಮಳೆಯಿಂದ ಉಂಟಾದ ನಷ್ಟವನ್ನು ಸಿಎಂ ಸುಖವಿಂದರ್ ಸಿಂಗ್, ಮೋದಿಯವರಿಗೆ ವಿವರಿಸಿದರು. ಹಿಮಾಚಲ ಭೇಟಿ ಬಳಿಕ ಪಂಜಾಬ್ ರಾಜ್ಯಕ್ಕೂ ಮೋದಿ ಭೇಟಿ ನೀಡಲಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಹಿಮಾಚಲ ಪ್ರದೇಶ ಭೇಟಿಗೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೋದಿ ಪೋಸ್ಟ್ ಮಾಡಿದ್ದು, ಈ ಸಂಕಷ್ಟದ ಸಮಯದಲ್ಲಿ ಪ್ರವಾಹ ಪೀಡಿತರೊಂದಿಗೆ ಕೇಂದ್ರ ಸರ್ಕಾರ ಹೆಗಲು ಕೊಟ್ಟು ನಿಲ್ಲಲಿದೆ ಎಂದು ತಿಳಿಸಿದ್ದರು. ಪ್ರಧಾನಿ ಮೋದಿ ಅವರು ಎರಡೂ ರಾಜ್ಯಗಳ ಅಧಿಕಾರಿಗಳೊಂದಿಗೆ ಈಗಾಗಲೇ ಉನ್ನತ ಮಟ್ಟದ ಚರ್ಚೆ ನಡೆಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಹಿಮಾಚಲ ಪ್ರದೇಶವು 4,122 ಕೋಟಿ ರೂ.ಗಳಷ್ಟು ನಷ್ಟವನ್ನು ಅನುಭವಿಸಿದೆ. ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳು ಮತ್ತು ರಸ್ತೆ ಅಪಘಾತಗಳಲ್ಲಿ 370 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.