ನವದೆಹಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿದ್ದು, ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಇದೇ ನ.13ರಂದು ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ ಅವರು ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.
ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್ ಅವರು, ಈ ಬಗ್ಗೆ ಉತ್ತರವನ್ನು ಬರೆದಿದ್ದಾರೆ. ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ. ಇಂತಹ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕ್ಗಳನ್ನು ಸ್ಥಾಪಿಸುವ ಕುರಿತಂತೆ ಗೋಯೆಲ್ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶದ ಕುರಿತು ಚರ್ಚಿಸಿದ್ದರು.
ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ. ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕ್ಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ಹೆಚ್ಡಿಕೆ ವಿನಂತಿಸಿದ್ದಾರೆ.
ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ. ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕ್ಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ.














