ಮನೆ ರಾಜ್ಯ ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕನ ಅಮಾನತು

ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕನ ಅಮಾನತು

0

ತುಮಕೂರು (Tumkur): ವಿದ್ಯಾರ್ಥಿಗಳ ಪೋಷಕರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಮಧುಗಿರಿ ತಾಲ್ಲೂಕು ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕ ಎಂ.ಸುರೇಶ್ ನನ್ನು ಡಿಡಿಪಿಐ ಎಂ.ರೇವಣಸಿದ್ದಪ್ಪ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ವ್ಯಾಸಂಗ ದೃಢೀಕರಣ ಪತ್ರ ಸೇರಿದಂತೆ ಇನ್ನಿತರೆ ಕೆಲಸಗಳಿಗಾಗಿ ಶಾಲೆಗೆ ಬರುವ ವಿದ್ಯಾರ್ಥಿಗಳ ಪೋಷಕರೊಂದಿಗೆ ಸಲುಗೆಯಿಂದ ವರ್ತಿಸುತ್ತಿದ್ದ ಸುರೇಶ್‌ ಅವರ ಮೊಬೈಲ್ ಸಂಖ್ಯೆ ಪಡೆದುಕೊಂಡು ನಂತರ ವಿದ್ಯಾರ್ಥಿಗಳನ್ನು ಮಾತನಾಡಿಸುವ ನೆಪದಲ್ಲಿ ಕರೆ ಮಾಡಿ ಅವರ ತಾಯಂದಿರ ಬಳಿ ಅಶ್ಲೀಲವಾಗಿ ಮಾತನಾಡುತ್ತಿದ್ದ. ಅಶ್ಲೀಲವಾಗಿ ಎಸ್ಎಂಎಸ್, ವಿಡಿಯೋ ಕಳುಹಿಸುತ್ತಿದ್ದ.

ಈ ಬಗ್ಗೆ ಗ್ರಾಮಸ್ಥರು ಡಿಡಿಪಿಐಗೆ ಒಂದು ತಿಂಗಳ ಹಿಂದೆಯೇ ದೂರು ಸಲ್ಲಿಸಿದ್ದರು. ಗ್ರಾಮಸ್ಥರ ದೂರಿನ ಬಗ್ಗೆ ತನಿಖೆ ನಡೆಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ಗ್ರಾಮಸ್ಥರು ಮಾಡಿರುವ ಆರೋಪಗಳು ಮೇಲು ನೋಟಕ್ಕೆ ನೈಜವೆಂದು ಕಂಡು ಬಂದಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ವರದಿಯ ಆಧಾರದ ಮೇಲೆ ಡಿಡಿಪಿಐ ಅಮಾನತು ಮಾಡಿ ಆದೇಶಿಸಿದ್ದಾರೆ.