ಮನೆ ರಾಷ್ಟ್ರೀಯ ಟೈಲರ್‌ ಕನ್ಹಯ್ಯ ಹತ್ಯೆ ಪ್ರಕರಣ: ಬೆದರಿಕೆ ಕರೆಯ ದೂರು ನಿರ್ಲಕ್ಷ್ಯಸಿದ ಎಎಸ್‌ಐ ಅಮಾನತು

ಟೈಲರ್‌ ಕನ್ಹಯ್ಯ ಹತ್ಯೆ ಪ್ರಕರಣ: ಬೆದರಿಕೆ ಕರೆಯ ದೂರು ನಿರ್ಲಕ್ಷ್ಯಸಿದ ಎಎಸ್‌ಐ ಅಮಾನತು

0

ಜೈಪುರ (Jaipur): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದ ಟೈಲರ್‌ ಕನ್ಹಯ್ಯ ಲಾಲ್‌ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ.

ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಭನ್ವರ್ ಲಾಲ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಉದಯಪುರದ ಪೊಲೀಸ್ ಮಹಾನಿರೀಕ್ಷಕ ಹಿಂಗ್ಲಾಜ್ ಡಾನ್ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಜೂನ್ 11 ರಂದು ಕನ್ಹಯ್ಯ ಲಾಲ್ ವಿರುದ್ಧ ಎಫ್‌ಐಆರ್ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು. ಜೂನ್ 15ರಂದು ಕನ್ಹಯ್ಯ ಜಾಮೀನಿನ ಮೇಲೆ ಹೊರಬಂದ ಬಳಿಕ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪೊಲೀಸರಿಗೆ ತಿಳಿಸಿದ್ದರು. ಬಳಿಕ, ಸ್ಥಳೀಯ ಠಾಣಾಧಿಕಾರಿ ಅವರು, ದೂರುದಾರರು ಮತ್ತು ಎರಡೂ ಸಮುದಾಯದ ಕೆಲವರನ್ನು ಠಾಣೆಗೆ ಕರೆಸಿ ವಿಷಯ ಇತ್ಯರ್ಥಪಡಿಸಿದ್ದರು.

ಇದೀಗ ಕನ್ಹಯ್ಯ ಅವರ ಹತ್ಯೆಯಾಗಿದ್ದು, ದೂರನ್ನು ಗಂಭೀರವಾಗಿ ಪರಿಗಣಿಸದ ಎಎಸ್‌ಐ ಅವರನ್ನು ಅಮಾನತು ಮಾಡಲಾಗಿದೆ. ಮಧ್ಯಸ್ಥಿಕೆ ವಹಿಸಿದ್ದವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿ ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಇಬ್ಬರು ದುಷ್ಕರ್ಮಿಗಳು ಧನ್ ಮಂಡಿ ಪ್ರದೇಶದ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಕತ್ತು ಸೀಳಿ ಕೊಲೆ ಮಾಡಿದ್ದರು. ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದ ದುಷ್ಕರ್ಮಿಗಳು, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್‌ ಅವರಿಗೆ ಅಪಮಾನ ಮಾಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳುತ್ತಿದ್ದೇವೆ. ಪ್ರಧಾನಿ ಮೋದಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಘಟನೆ ಬಳಿಕ ಉದಯಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕರ್ಫ್ಯೂ ವಿಧಿಸಲಾಗಿದೆ.