ಮನೆ ರಾಜ್ಯ ಹೆಚ್.ಡಿ.ದೇವೇಗೌಡರ ಬಗ್ಗೆ ಹೀನ ಹೇಳಿಕೆ: ಕೆ.ಎನ್.ರಾಜಣ್ಣ ವಿರುದ್ಧ ಕಿಡಿಕಾರಿದ ಹೆಚ್ಡಿಕೆ

ಹೆಚ್.ಡಿ.ದೇವೇಗೌಡರ ಬಗ್ಗೆ ಹೀನ ಹೇಳಿಕೆ: ಕೆ.ಎನ್.ರಾಜಣ್ಣ ವಿರುದ್ಧ ಕಿಡಿಕಾರಿದ ಹೆಚ್ಡಿಕೆ

0

ಬೆಂಗಳೂರು (Bengaluru): ದೇವೇಗೌಡರ ಬಗ್ಗೆ ಹೀನವಾಗಿ ಮಾತನಾಡುವ ಮೂಲಕ ಮಾಜಿ ಶಾಸಕ ಕೆ.ಎನ್. ರಾಜಣ್ಣ ತಮ್ಮ ಹೀನ ಸಂಸ್ಕೃತಿಯನ್ನು ಪ್ರದರ್ಶಿಸಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆಯೇ ಆಕ್ರೋಶ ವ್ಯಕ್ತಪಡಿಸಿದ ಅವರು, ಅತ್ಯಂತ ಅನಾಗರಿಕವಾಗಿ, ಒಂದು ವಿಕೃತವಾಗಿ ಮಾತನಾಡಿರುವ ರಾಜಣ್ಣ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ ಎಂದರು.

ಕಳೆದ 2004ರಲ್ಲಿ ರಾಜಣ್ಣ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯ ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ಇಲ್ಲದಿದ್ದರೆ ಅವರನ್ನು ಯಾರು ಕೇಳುತ್ತಿದ್ದರು ಎಂದು ಕಿಡಿಕಾರಿದರು.

ದೇವೇಗೌಡರು ಅಂದು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ತೆರಳಿ ಪ್ರಚಾರ ಮಾಡಿದ್ದರು. ಇಬ್ಬರು ದೇವೇಗೌಡರ ಹೆಗಲಿಗೆ ಹೆಗಲು ಕೊಡುತ್ತಾರೆ, ನಿಜ. ರಾಜಣ್ಣನವರಿಗೆ ಅರಿವಿದ್ದಂತೆ ಇಲ್ಲ. ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡುತ್ತೇವೆ. ಭುಜ ಕೊಟ್ಟೇ ಮೆರವಣಿಗೆ ಮಾಡೋದಲ್ಲವೇ? ದೇವೇಗೌಡರು ಕೂಡ ಹಾಗೆಯೇ, ನಮ್ಮ ಪಾಲಿಗೆ ಅವರು ದೈವವೇ ಎಂದು ಹೇಳಿದರು.

ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ, ಆತನೂ ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂಬ ನಂಬಿಕೆ ನನ್ನದು ಎಂದ ಅವರು, ಹಲವಾರು ಒತ್ತಡಗಳಿಂದ ತುಮಕೂರಿನಲ್ಲಿ ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಸೋಲಿಸಿದರು. ಅವರನ್ನು ಸೋಲಿಸಲು ಕುತಂತ್ರ ನಡೆಸಿದ್ದು ಇದೇ ರಾಜಣ್ಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸವಾಲು ಹಾಕಿದ ಹೆಚ್ ಡಿಕೆ:

ಇನ್ನೆರಡು ಮೂರು ತಿಂಗಳು ನೋಡಲಿ. ದೇವೇಗೌಡರೇ ಸ್ವತಂತ್ರವಾಗಿ ಓಡಾಡುತ್ತಾರೆ ಎಂದ ಹೆಚ್ ಡಿಕೆ ಅವರು,  ದೇವೇಗೌಡರ ಹಣೆಬರಹ ಬರೆದವರು, ಅವರನ್ನು ಎಲ್ಲರೂ ಹೋಗಿದ್ದಾರೆ. ಕ್ಷಮೆ ಕೇಳಬೇಕು ಅಂತಾ ಹೇಳುವುದಿಲ್ಲ. ದೇವೇಗೌಡರ ಮಗ ನಾನು ಇನ್ನೂ ಬದುಕಿದ್ದೇನೆ. ಮಧುಗಿರಿಗೆ ಬಂದು ತೋರಿಸುತ್ತೇನೆ. ನಾನು ಉತ್ತರ ಕೊಡುವುದಲ್ಲಾ, ಅಲ್ಲಿನ ಜನರಿಂದಲೇ ಉತ್ತರ ಕೊಡಿಸುತ್ತೇನೆ ಎಂದು ರಾಜಣ್ಣ ವಿರುದ್ಧ ತೊಡೆತಟ್ಟಿದರು.