ಮನೆ ರಾಷ್ಟ್ರೀಯ ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣ ಹಗುರ ಮಾತು: ಕ್ಷಮೆ ಕೋರಲು ಸೂಚಿಸಿದ ಡಿಕೆಶಿ

ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣ ಹಗುರ ಮಾತು: ಕ್ಷಮೆ ಕೋರಲು ಸೂಚಿಸಿದ ಡಿಕೆಶಿ

0

ನವದೆಹಲಿ (New Delhi): ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನೀಡಿರುವ ಹೇಳಿಕೆ ಖಂಡನೀಯ, ಅಮಾನವೀಯ. ಈ ಕೂಡಲೇ ರಾಜಣ್ಣ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೂಚಿಸಿದ್ದಾರೆ.

ದೆಹಲಿಯಲ್ಲಿರುವ ಡಿಕೆಶಿ ಈ ಸಂಬಂಧ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ದೇವೇಗೌಡರ ಪರಿಸ್ಥಿತಿ ಬಗ್ಗೆ ರಾಜಣ್ಣ ಅವರು ಆಡಿರುವ ಮಾತನ್ನು ಕಾಂಗ್ರೆಸ್ ಖಂಡಿಸುತ್ತದೆ. ಪಕ್ಷದ ನಾಯಕನಾಗಿ, ವ್ಯಯಕ್ತಿಕವಾಗಿಯೂ ಇದನ್ನು ಖಂಡಿಸುತ್ತೇನೆ. ಯಾರೇ ನಾಯಕರು ಮಾನವೀಯತೆ ಮೆರೆಯಬೇಕು. ಸಮಾಜ ಹಾಗೂ ದೇಶಕ್ಕೆ ಸೇವೆ ಮಾಡಿರುವ ಹಿರಿಯ ನಾಯಕರಾದ ದೇವೇಗೌಡರ ಬಗ್ಗೆ ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ. ದೇವೇಗೌಡರು ಪ್ರಧಾನಿಯಾಗಲು ಹಿಂದೆ ಕಾಂಗ್ರೆಸ್ ಪಕ್ಷವೇ ಬೆಂಬಲ ನೀಡಿತ್ತು. ನಾವು ದೇವೇಗೌಡರನ್ನು ಬಹಳ ಗೌರವಯುತವಾಗಿ ಕಾಣುತ್ತಿದ್ದೇವೆ. ಅವರ ಆರೋಗ್ಯದ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ನಾನು ಕೂಡಲೇ ರಾಜಣ್ಣ ಅವರಿಗೆ ದೂರವಾಣಿ ಕರೆ ಮಾಡಿ, ಕ್ಷಮೆ ಕೋರುವಂತೆ ಸೂಚನೆ ನೀಡುತ್ತೇನೆ.

ಇಂತಹ ಹೇಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಪೂಜ್ಯರಾದ ದೇವೇಗೌಡರಿಗೆ ಉತ್ತಮ ಆರೋಗ್ಯ ಮತ್ತು ಇನ್ನಷ್ಟು ಸೇವೆ ಮಾಡುವ ಅವಕಾಶವನ್ನು ದೇವರು ಕರುಣಿಸಲಿ ಎಂದು ನಾವು ಪ್ರಾರ್ಥನೆ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದ್ದಾರೆ.