ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿಯಾಗಿದೆ. ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಒಂದು ವಾರದಲ್ಲಿ ಎರಡು ಕಡೆ ಕಾಡ್ಗಿಚ್ಚು ಉಂಟಾಗಿ, ಕಾಡು ಹೊತ್ತಿಯುರಿದಿದೆ. ಅರಣ್ಯಾಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸ್ತಿಲ್ಲ, ಅಲ್ಲದೇ ಕಾಡು ಪ್ರಾಣಿಗಳ ನಿರಂತರವಾಗಿ ನಾಡಿಗೆ ಲಗ್ಗೆಯಿಟ್ಟು ತೊಂದರೆ ಕೊಡ್ತಿವೆ.
ಪದೇ ಪದೇ ಕಾಡು ಪ್ರಾಣಿಗಳು ನಾಡಿಗೆ ಎಂಟ್ರಿ ಕೊಡ್ತಿವೆ. ನಾವು ಎಷ್ಟೇ ಬಾರಿ ಮನವಿ ಮಾಡಿದರೂ ಕೂಡ ಅಧಿಕಾರಿಗಳು ಸ್ಪಂದಿಸ್ತಿಲ್ಲ, ಇದರಿಂದ ರೊಚ್ಚಿಗೆದ್ದಿರುವ ಸ್ಥಳೀಯರು ಕಾಡಿಗೆ ಬೆಂಕಿಯಿಡ್ತಿದ್ದಾರೆಂಬ ಚರ್ಚೆ ನಡೆಯುತ್ತಿದೆ. ಅಲ್ಲದೇ ಸ್ಥಳೀಯರ ವಿಶ್ವಾಸ ಗಳಿಸುವಲ್ಲಿಯೂ ಕೂಡ ಅಧಿಕಾರಿಗಳು ವಿಫಲರಾಗಿದ್ದಾರೆಂಬ ಭಾವನೆ ಜನರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೊಕ್ಕನಹಳ್ಳಿ ಭಾಗದಲ್ಲಿ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿಯಿಟ್ಟಿದ್ದಾರೆ. ಇದರಿಂದ 35ಕ್ಕೂ ಹೆಚ್ಚು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಕಳೆದ ತಿಂಗಳ 26ರಂದು ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದ ಬೈಲೂರು ವಲಯ ಹಾಗೂ ಕೊಳ್ಳೇಗಾಲ ವನ್ಯಜೀವಿ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದರು. ಇದೀಗಾ ಮತ್ತೇ ಕೊಳ್ಳೇಗಾಲ ವನ್ಯಜೀವಿ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು.
ಆದರೆ ಪದೇ ಪದೇ ಬೆಂಕಿ ಕಾಣಿಸಿಕೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯೆಗೆ ಎಷ್ಟೇ ಬಾರಿ ಕರೆ ಮಾಡಿದರೂ ಕೂಡ ಅಧಿಕಾರಿಗಳಿಂದ ಸೂಕ್ತ ಪ್ರತಿಕ್ರಿಯೆ ಸಿಕ್ತಿಲ್ಲ ಎನ್ನಲಾಗಿದೆ. ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಯಾರೋ ಕಿಡಿಗೇಡಿಗಳು ಮತ್ತೆ ಮತ್ತೇ ಬೆಂಕಿ ಹಚ್ಚುತ್ತಿದ್ದಾರೆ. ಅವರನ್ನು ಹಿಡಿದು ಶಿಕ್ಷಿಸುವಲ್ಲಿಯೂ ಕೂಡ ಅರಣ್ಯ ಇಲಾಖೆ ವಿಫಲವಾಗಿದೆ. ಮತ್ತೊಂದೆಡೆ ಅರಣ್ಯಾಧಿಕಾರಿಗಳು ಕಾಡಂಚಿನ ಜನರ ವಿಶ್ವಾಸ ಗಳಿಸಿಕೊಳ್ಳುವಲ್ಲಿ ಸೋತಿದ್ದಾರೆ.














