ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರ ಬಗ್ಗೆ ತಮಿಳುನಾಡು ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈ ಕೊನೆಗೂ ಮೌನ ಮುರಿದಿದ್ದಾರೆ.
ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ. ಪಕ್ಷದ ಕೋರ್ ಕಮಿಟಿಗೆ ಈ ನಿರ್ಧಾರವನ್ನು ಮುಂಚಿತವಾಗಿ ತಿಳಿಸಿದ್ದೇನೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಲಿಖಿತವಾಗಿ ಕೊಟ್ಟಿದ್ದೇನೆ. ಇದಿಷ್ಟಕ್ಕೇ ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂದರ್ಥವಲ್ಲ, ಸ್ಪರ್ಧೆ ಮಾಡದೇ ಇರಲು ನಾನೇ ನಿರ್ಧಾರ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ 27 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಬಿಡುಗಡೆಗೊಳಿಸಿದ ನಂತರ ಈ ಬೆಳವಣಿಗೆ ಕಂಡುಬಂದಿದೆ. ಇದಕ್ಕೆ ಸ್ಪಷ್ಟನೆ ನೀಡುವ ಅಗತ್ಯವಿರಲಿಲ್ಲ. ಆದ್ರೆ ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದ್ದರಿಂದ ನಾನಿಲ್ಲಿ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಮುಂದುವರಿದು.. ನನ್ನ ನಿರ್ಧಾರವನ್ನ ಗೌರವಿಸಿದ್ದಕ್ಕಾಗಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನ ಬೆಂಬಲಿಸಿ ಪ್ರಚಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಬಿಜೆಪಿ ನಾಯಕತ್ವಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಧನ್ಯವಾದ ಅರ್ಪಿಸಿದ್ದಾರೆ.
ಶುಕ್ರವಾರವಷ್ಟೇ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಅಣ್ಣಾಮಲೈ ಅವರನ್ನ ಹಾಡಿಹೊಗಳಿದ್ದರು. ಅಣ್ಣಾಮಲೈ ಪಕ್ಷದ ಸಮರ್ಪಿತ ಕಾರ್ಯಕರ್ತ ಮತ್ತು ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಬದಲು ರಾಜ್ಯಾದ್ಯಂತ ಕೆಲಸ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ರಾಜ್ಯ ಘಟಕದ ಇನ್ಸೈಡ್ ಮಾಹಿತಿ ಮತ್ತು ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದರು.














