ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಇದೀಗ ಸಿಬಿಐ ತನಿಖೆಗೆ ವಹಿಸಲಾಗಿದೆ. ಮೇ 6ರಂದು ರಾತ್ರಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆರೋಪಿಗಳ ಪತ್ತೆಗಾಗಿ ಎಸ್ಐಟಿ ರಚಿಸಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ಹಸ್ತಾಂತರಿಸಲಾಗಿದೆ.
ಈ ಪ್ರಕರಣ ಸಂಬಂಧ ಮೇ 11ರಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖಾಧಿಕಾರಿಗಳು ಡಿಜಿಟಲ್ ಸುಳಿವು ಮತ್ತು ಅಂತರರಾಜ್ಯ ಸಂಪರ್ಕ ಆಧಾರದ ಮೇಲೆ ಪ್ರಕರಣವನ್ನು ಭೇದಿಸಿದ್ದಾರೆ. ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು.
ಈ ಡಿಜಿಟಲ್ ಪೇಮೆಂಟ್ ತನಿಖಾಧಿಕಾರಿಗಳಿಗೆ ಮೊಬೈಲ್ ನಂಬರ್ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
















