ರಾಮನಗರ : ನಿಖಿಲ್ ವಯಸ್ಸಿಗೆ ತಕ್ಕಂತೆ ಮಾತನಾಡಬೇಕು. ಅನುಭವಕ್ಕೆ ತಕ್ಕಂತೆ ಮಾತನಾಡಿದರೆ ಒಳ್ಳೆಯದು ಎಂದು ನಿಖಿಲ್ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಆದಷ್ಟೂ ಬೇಗ ಎಲ್ಲಾ ಒಳ್ಳೆಯದು ಆಗುತ್ತದೆ. ಸಿಹಿ ಸುದ್ದಿ ಬರಲಿದೆ. ಸ್ವಲ್ಪ ದಿನ ಕಾಯಬೇಕು ಅಷ್ಟೇ ಎಂದರು.
ಹಾರೋಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಖಿಲ್ಗೆ ಇನ್ನು ರಾಜಕೀಯ ಅನುಭವ ಕಡಿಮೆ. ಯಾವ ನೈತಿಕತೆ ಇಟ್ಟುಕೊಂಡು ನಿಖಿಲ್ ಮಾತನಾಡುತ್ತಾರೋ ಗೊತ್ತಿಲ್ಲ. ಡಿಕೆಶಿ ಹಾಗೂ ಕುಮಾರಸ್ವಾಮಿ ಒಂದೇ ವಯಸ್ಸಿನವರು. ರಾಜಕೀಯವಾಗಿ ಅವರು ಮಾತನಾಡುತ್ತಾರೆ. ರಾಜಕಾರಣ ಬರುತ್ತೆ, ಹೋಗುತ್ತೆ. ಆದರೆ ಮಾತಿನ ಮೇಲೆ ನಿಗಾ ಇಟ್ಟು ಮಾತನಾಡಬೇಕು ಎಂದು ಕಿಡಿಕಾರಿದರು.

















