ನವದೆಹಲಿ: ಮಾಡೆಲ್ ಹಾಗೂ ನಟಿ ತ್ವಿಷಾ ಶರ್ಮಾ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ಭಾರತದ ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ (Suo Motu) ವಿಚಾರಣೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ಹಸ್ತಾಂತರಿಸಲು ಒಪ್ಪಿಗೆ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು ಪ್ರಕರಣದಲ್ಲಿ ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯುವ ಉದ್ದೇಶದಿಂದ ಈ ಮಹತ್ವದ ಆದೇಶ ಹೊರಡಿಸಿದೆ.ತ್ವಿಷಾ ಶರ್ಮಾ ಅವರ ಅನುಮಾನಾಸ್ಪದ ಸಾವು ಹಾಗೂ ವರದಕ್ಷಿಣೆ ಕಿರುಕುಳ ಆರೋಪಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೊಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದೆ.ವಿಚಾರಣೆ ವೇಳೆ ನ್ಯಾಯಪೀಠವು ಪ್ರಕರಣದಲ್ಲಿ ನ್ಯಾಯಯುತ ತನಿಖೆ ಖಚಿತಪಡಿಸಲಾಗುವುದು ಎಂದು ಹೇಳಿ, ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿತು.
ಈ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ವಿಷಯವನ್ನು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.ಈ ಹೇಳಿಕೆಯನ್ನು ದಾಖಲಿಸಿಕೊಂಡ ಸುಪ್ರೀಂಕೋರ್ಟ್, ದೇಶದ ಪ್ರಮುಖ ತನಿಖಾ ಸಂಸ್ಥೆಯಾದ ಸಿಬಿಐ ಮೇಲಿನ ಸಾರ್ವಜನಿಕರ ವಿಶ್ವಾಸ ಉಳಿಯಬೇಕು ಎಂದು ಅಭಿಪ್ರಾಯಪಟ್ಟಿತು.
ಪ್ರಕರಣದ ತನಿಖೆ ನಡೆಯುತ್ತಿರುವ ಹಿನ್ನೆಲೆ ಮಾಧ್ಯಮ ವರದಿಗಾರಿಕೆ ಕುರಿತು ಕೂಡ ಸುಪ್ರೀಂಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ.ಕೆಲವು ವರದಿಗಳು ಬಾಧಿತ ಕುಟುಂಬಕ್ಕೆ ಮತ್ತಷ್ಟು ಮಾನಸಿಕ ನೋವುಂಟು ಮಾಡಿವೆ. ಕುಟುಂಬದ ಸದಸ್ಯರ ಹೇಳಿಕೆಗಳನ್ನು ‘ಸೌಂಡ್ ಬೈಟ್’ಗಳಾಗಿ ರೂಪಿಸಿ ಪ್ರಸಾರ ಮಾಡುವುದು ಸರಿಯಲ್ಲ ಎಂದು ನ್ಯಾಯಪೀಠ ಹೇಳಿದೆ.
ತನಿಖೆಗೆ ಸಂಬಂಧಿಸಿದ ಸಾಕ್ಷಿದಾರರಾಗುವ ಸಾಧ್ಯತೆ ಇರುವವರ ಹೇಳಿಕೆಗಳನ್ನು ಮಾಧ್ಯಮಗಳು ನಿರಂತರವಾಗಿ ಪ್ರಸಾರ ಮಾಡಬಾರದು. ಇದರಿಂದ ತನಿಖೆಯ ದಿಕ್ಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.ಬಾಧಿತ ಹಾಗೂ ಆರೋಪಿತರ ಕುಟುಂಬ ಸದಸ್ಯರು ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವುದಕ್ಕಿಂತ ತನಿಖಾ ಸಂಸ್ಥೆಗಳ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಇದೇ ವೇಳೆ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ತ್ವರಿತವಾಗಿ ಎರಡನೇ ಮರಣೋತ್ತರ ಪರೀಕ್ಷೆಗೆ ಆದೇಶ ನೀಡಿದ ಕ್ರಮವನ್ನು ಸುಪ್ರೀಂಕೋರ್ಟ್ ಶ್ಲಾಘಿಸಿದೆ.ಪ್ರಕರಣದಲ್ಲಿ ಆರೋಪಿತರ ಪರ ವಕೀಲರು, ತನಿಖೆಗೆ ಸಂಬಂಧಿಸಿದಂತೆ ಮಾಜಿ ನ್ಯಾಯಾಧೀಶರು ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.
ಮಧ್ಯಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್, ಮಾಧ್ಯಮಗಳ ಹಸ್ತಕ್ಷೇಪದಿಂದ ಪ್ರಕರಣದಲ್ಲಿ ಕೆಲವು ಪ್ರಮುಖ ಬೆಳವಣಿಗೆಗಳು ನಡೆದಿವೆ ಎಂದು ತಿಳಿಸಿದರೂ, ತನಿಖೆ ಕಾನೂನು ಪ್ರಕ್ರಿಯೆಯಂತೆ ನಡೆಯಬೇಕು ಎಂದು ಒತ್ತಿ ಹೇಳಿದರು.ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಹಿನ್ನೆಲೆ, ಸಾರ್ವಜನಿಕರು ಊಹಾಪೋಹಗಳಿಗೆ ಒಳಗಾಗದೆ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಡಬೇಕು ಎಂದು ಸುಪ್ರೀಂಕೋರ್ಟ್ ಮನವಿ ಮಾಡಿದೆ.ಪ್ರಕರಣದ ಸತ್ಯಾಂಶ ಹೊರಬರುವವರೆಗೆ ತನಿಖೆಗೆ ಅವಕಾಶ ನೀಡಬೇಕು ಎಂಬ ಸಂದೇಶವನ್ನೂ ನ್ಯಾಯಪೀಠ ನೀಡಿದೆ.
33 ವರ್ಷದ ಮಾಜಿ ‘ಮಿಸ್ ಪುಣೆ’ ಹಾಗೂ ನಟಿ ತ್ವಿಷಾ ಶರ್ಮಾ ಅವರು ಮೇ 12, 2026 ರಂದು ಮಧ್ಯಪ್ರದೇಶದ ಭೋಪಾಲ್ ನಗರದಲ್ಲಿರುವ ತಮ್ಮ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮದುವೆಯಾದ ಕೇವಲ ಐದು ತಿಂಗಳಲ್ಲೇ ಈ ಘಟನೆ ಸಂಭವಿಸಿದ್ದು, ತ್ವಿಷಾ ಅವರ ಪೋಷಕರು ಇದು ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ತ್ವಿಷಾ ಪತಿ ಸಮರ್ಥ್ ಸಿಂಗ್ ಹಾಗೂ ಅವರ ತಾಯಿ ಗಿರಿಬಾಲಾ ಸಿಂಗ್ (ನಿವೃತ್ತ ಜಿಲ್ಲಾ ನ್ಯಾಯಾಧೀಶರು) ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಪತಿ ಸಮರ್ಥ್ ಸಿಂಗ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.ಆರೋಪಿಗಳ ಕುಟುಂಬ ಕಾನೂನು ಹಿನ್ನೆಲೆ ಹೊಂದಿರುವುದರಿಂದ ಸ್ಥಳೀಯ ತನಿಖೆಯಲ್ಲಿ ಸಾಂಸ್ಥಿಕ ಪಕ್ಷಪಾತ ಹಾಗೂ ಲೋಪದೋಷಗಳು ನಡೆದಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.ಮಧ್ಯಪ್ರದೇಶ ಸರ್ಕಾರವೂ ಪ್ರಕರಣವನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಿದ್ದು, ಈ ನಿರ್ಧಾರವನ್ನು ಸುಪ್ರೀಂಕೋರ್ಟ್ ಸ್ವಾಗತಿಸಿದೆ.


















