ಬೆಂಗಳೂರು (ಜೂನ್ 08) : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಡಿಲಿಕೆ ಸಿಕ್ಕಿರುವುದರಿಂದ ಬಿಎಸ್ ಯಡಿಯೂರಪ್ಪ ಅವರು ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಮುಂಚಿತ ಅನುಮತಿಯ ಕಿರಿಕಿರಿ ಇಲ್ಲದೇ ಮುಕ್ತಾವಾಗಿ ದೇಶಾದ್ಯಂತ ಪ್ರವಾಸ ಕೈಗೊಳ್ಳಬಹುದಾಗಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತು ಸಡಿಲಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು ಎನ್ನಲಾಗಿದೆ.

ಹಾಗೂ ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಯಡಿಯೂರಪ್ಪನವರಿಗೆ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿ ಆದೇಶಿಸಿದೆ. 2024ರ ಫೆಬ್ರವರಿ 2ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಳೆಯ ಲೈಂಗಿಕ ದೌರ್ಜನ್ಯ ಪ್ರಕರಣವೊಂದಕ್ಕೆ ನ್ಯಾಯ ಒದಗಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ದೂರು ದಾಖಲಾದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದ್ದು, ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು, ಈಗಾಗಲೇ ಕೋರ್ಟ್ ಸಹ ಜಾಮೀನು ನೀಡಿತ್ತು ಎಂಬುದ್ದಾಗಿದೆ.













