ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರದ ಅಸಮಾಧಾನಗಳು ಇನ್ನೂ ತಣ್ಣಗಾಗದಿರುವ ನಡುವೆ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೂಡ ತಮ್ಮ ಖಾತೆಯ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿದ್ದ ಪ್ರಮುಖ ಸಂಸ್ಥೆಗಳಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹಾಗೂ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಳಿಯೇ ಉಳಿದಿರುವುದು ಸಚಿವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, BDA ಮತ್ತು BMRDA ಇಲ್ಲದಿದ್ದರೆ ಬೆಂಗಳೂರು ಅಭಿವೃದ್ಧಿ ಖಾತೆಯ ಮಹತ್ವ ಕಡಿಮೆಯಾಗುತ್ತದೆ ಎಂಬ ಅಭಿಪ್ರಾಯವನ್ನು ಕೃಷ್ಣ ಬೈರೇಗೌಡ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಗಮನಕ್ಕೂ ತಂದಿದ್ದಾರೆ ಎನ್ನಲಾಗಿದೆ. ಈ ಕುರಿತು ದೂರವಾಣಿ ಮೂಲಕ ಮಾತುಕತೆಯೂ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಖಾತೆಯ ವ್ಯಾಪ್ತಿಯಲ್ಲಿ ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಹಾಗೂ ಕೇಂದ್ರ ನಗರ ಪಾಲಿಕೆಗಳ ಆಡಳಿತ ಮಾತ್ರ ಇರುವುದರಿಂದ ಜನರಿಗೆ ನೇರವಾಗಿ ಗೋಚರಿಸುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸೀಮಿತ ಅವಕಾಶಗಳಿವೆ ಎಂಬ ಅಸಮಾಧಾನವನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಾತ್ರ ಈ ಖಾತೆಯ ವ್ಯಾಪ್ತಿಯಲ್ಲಿವೆ.
ಇನ್ನೂ ಖಾತೆ ಜವಾಬ್ದಾರಿ ಸ್ವೀಕರಿಸಿಲ್ಲವೇ?
ಈ ಬೆಳವಣಿಗೆಗಳ ನಡುವೆ ಕೃಷ್ಣ ಬೈರೇಗೌಡ ಅವರು ಇನ್ನೂ ಅಧಿಕೃತವಾಗಿ ಬೆಂಗಳೂರು ಅಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ಸ್ವೀಕರಿಸಿಲ್ಲ ಎಂಬ ಮಾಹಿತಿಯೂ ಹರಿದಾಡುತ್ತಿದೆ.

ಹೈಕಮಾಂಡ್ ಮಧ್ಯಪ್ರವೇಶದ ನಿರೀಕ್ಷೆಯಲ್ಲಿರುವ ಅವರು, BDA ಮತ್ತು BMRDA ಅನ್ನು ತಮ್ಮ ಖಾತೆಯ ವ್ಯಾಪ್ತಿಗೆ ಸೇರಿಸುವಂತೆ ಒತ್ತಾಯಿಸುತ್ತಿದ್ದು, ಅದು ಸಾಧ್ಯವಾಗದಿದ್ದರೆ ಖಾತೆ ಬದಲಾವಣೆಯ ಬೇಡಿಕೆ ಮುಂದಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ವಿಚಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಗಮನಕ್ಕೂ ತರಲಾಗಿದೆ ಎನ್ನಲಾಗಿದೆ.
ರಾಮಲಿಂಗಾ ರೆಡ್ಡಿ ಪ್ರಕರಣವೂ ಚರ್ಚೆಯಲ್ಲಿ
ಬೆಂಗಳೂರು ಅಭಿವೃದ್ಧಿ ಖಾತೆ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲಿನಿಂದಲೇ ಚರ್ಚೆಗೆ ಕಾರಣವಾಗಿತ್ತು. ಈ ಹಿಂದೆ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಈ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂಬ ಕಾರಣದಿಂದ ಅವರು ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ಸಲ್ಲಿಸಿದ್ದರು.
ನಂತರ ಹೈಕಮಾಂಡ್ ಮಧ್ಯಪ್ರವೇಶದ ಬಳಿಕ ರಾಜೀನಾಮೆ ಹಿಂಪಡೆದು ತಮ್ಮ ಖಾತೆಯ ಜವಾಬ್ದಾರಿಯನ್ನು ಮುಂದುವರಿಸಿದ್ದರು. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಹೆಚ್ಚುವರಿ ಅಥವಾ ಹೊಸ ಖಾತೆ ನೀಡುವ ಭರವಸೆಯೊಂದಿಗೆ ಅವರನ್ನು ಮನವೊಲಿಸಲಾಗಿತ್ತು ಎಂಬ ಮಾತುಗಳು ಕೇಳಿಬಂದಿದ್ದವು.
ಬೈರತಿ ಸುರೇಶ್ ಹೆಸರು ಮೊದಲ ಪಟ್ಟಿಯಲ್ಲಿ ಇಲ್ಲದಿದ್ದದ್ದು ಯಾಕೆ?
ಇನ್ನೊಂದೆಡೆ, ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಬೈರತಿ ಸುರೇಶ್ ಅವರ ಹೆಸರು ಕಾಣಿಸದಿರುವುದಕ್ಕೂ ರಾಜಕೀಯ ಕಾರಣಗಳಿದ್ದವು ಎಂದು ಮೂಲಗಳು ಹೇಳುತ್ತಿವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಅವಧಿಯಲ್ಲಿ ಬೆಂಗಳೂರು ಸುತ್ತಮುತ್ತಲಿನ ನೂರಾರು ಕೋಟಿ ರೂಪಾಯಿ ಮೌಲ್ಯದ ಸುಮಾರು 50 ಎಕರೆ ಸರ್ಕಾರಿ ಭೂಮಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವ ಕ್ರಮಕ್ಕೆ ಅವರು ಮುಂದಾಗಿದ್ದರು. ಈ ಕ್ರಮ ಕೆಲವು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೂ ಕಾರಣವಾಗಿತ್ತು ಎನ್ನಲಾಗಿದೆ.
ಅದೇ ರೀತಿ, ಕಂದಾಯ ಇಲಾಖೆಯಲ್ಲಿ ಉಪನೋಂದಣಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ವರ್ಗಾವಣೆಗಾಗಿ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ಕಡಿಮೆಯಾಗಿತ್ತು. ಇದೂ ಕೆಲ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ವಿಧಾನಸೌಧದಲ್ಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಬೈರತಿ ಸುರೇಶ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಹಾಗೂ ಸರ್ಕಾರದ ವಿಚಾರವಾಗಿ ಭೇಟಿ ಮಾಡಿದ್ದೇನೆ ಎಂದಷ್ಟೇ ಹೇಳಿ ತೆರಳಿದ್ದರು.
ಆದರೆ ಮೂಲಗಳ ಪ್ರಕಾರ, ಆ ಭೇಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ, BDA ಹಾಗೂ BMRDA ಅಧಿಕಾರ ವ್ಯಾಪ್ತಿ ಕುರಿತ ವಿಷಯಗಳೇ ಪ್ರಮುಖವಾಗಿ ಚರ್ಚೆಯಾಗಿವೆ ಎನ್ನಲಾಗಿದೆ.














