ಮನೆ ಸುದ್ದಿ ಜಾಲ ಉಡುಪಿ ಶ್ರೀ ಕೃಷ್ಣ ದರ್ಶನ : ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ ಶ್ರೀ ಕೃಷ್ಣ ದರ್ಶನ : ಸಚಿವೆ ನಿರ್ಮಲಾ ಸೀತಾರಾಮನ್

0

ಉಡುಪಿಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಉಡುಪಿಯಲ್ಲಿ ಆಯೋಜಿಸಲಾಗಿರುವ ಭಾರತೀಯ ಜನತಾ ಪಕ್ಷದ (BJP) ಜಿಲ್ಲಾ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಸಚಿವರು, ಈ ಸಂದರ್ಭದಲ್ಲಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ಐತಿಹಾಸಿಕ ಪ್ರಸಿದ್ಧ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಮಠದ ಕನಕನ ಕಿಂಡಿಯ ಮೂಲಕ ಕಡಗೋಲು ಕೃಷ್ಣನ ಭವ್ಯ ದರ್ಶನ ಪಡೆದ ಸಚಿವರು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಕೃಷ್ಣ ಮಠದ ಆವರಣದಲ್ಲಿರುವ ಪುರಾತನ ದೇವಾಲಯಗಳಾದ ಶ್ರೀ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು ಎನ್ನಲಾಗುತ್ತಿದೆ.

ಕುರಿತು ಶ್ರೀ ಕೃಷ್ಣ ಮಠದ ಭೇಟಿಯ ವೇಳೆ ಪ್ರಸ್ತುತ ಪರ್ಯಾಯ ಪೀಠ ಅಲಂಕರಿಸಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಕೇಂದ್ರ ವಿತ್ತ ಸಚಿವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಪರ್ಯಾಯ ಶಿರೂರು ಮಠಾಧೀಶರು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮಠದ ವತಿಯಿಂದ ಸಾಂಪ್ರದಾಯಿಕವಾಗಿ ಗೌರವಾರ್ಪಣೆ ಮಾಡಿ, ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಮಠದ ದರ್ಶನದ ಬಳಿಕ ಸಚಿವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಪ್ರಸಿದ್ಧ ಕಾರ್ಣಿಕ ಕ್ಷೇತ್ರವಾದ ‘ಹೊಸ ಮಾರಿಗುಡಿ’ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಜಗನ್ಮಾತೆ ಶ್ರೀದೇವಿಯ ದರ್ಶನ ಪಡೆದು, ವಿಶೇಷ ಪೂಜೆ-ಅರ್ಚನೆಗಳನ್ನು ನೆರವೇರಿಸಿದರು. ದರ್ಶನದ ನಂತರ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಜೊತೆ ಕೆಲಕಾಲ ಸಮಾಲೋಚನೆ ನಡೆಸಿದ ಅವರು, ಕ್ಷೇತ್ರ ಅಭಿವೃದ್ಧಿಯ ಕುರಿತು ಮಾಹಿತಿ ಪಡೆದರು. ತದನಂತರ ಕರಾವಳಿಯ ಮತ್ತೊಂದು ಪ್ರಮುಖ ಧಾರ್ಮಿಕ ಕೇಂದ್ರವಾದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಾಲಯಕ್ಕೂ ಭೇಟಿ ನೀಡಿ ದೇವಿಯ ಕೃಪೆಗೆ ಪಾತ್ರರಾದರು.

ಉಡುಪಿ ಜಿಲ್ಲಾ ಪ್ರವಾಸದ ಪ್ರಮುಖ ಉದ್ದೇಶವಾಗಿ, ಕಾಪು ತಾಲೂಕಿನ ಉಚ್ಚಿಲದ ಮಹಾಲಕ್ಷ್ಮೀ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ “ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ” ಕಾರ್ಯಕ್ರಮವನ್ನು ಕೇಂದ್ರ ಸಚಿವರು ಅಧಿಕೃತವಾಗಿ ಉದ್ಘಾಟಿಸಿದ್ದು. ಉದ್ಘಾಟನೆಯ ಬಳಿಕ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದರು. ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕಾಪು ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು ಎಂಬುದ್ದಾಗಿದೆ.