ಮನೆ ರಾಜ್ಯ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

0

ಮುಡಿಪು (Mudipu): ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.

ಉಳ್ಳಾಲ ಠಾಣೆಯ ಇನ್‌ಸ್ಪೆಕ್ಟರ್‌ ಸಂದೀಪ್ ಅವರು ಇಂದು ಆರೋಪಿ ಮಹಮದ್ ಮುಕ್ತಾರ್ ಅಹಮದ್‌ ನನ್ನು ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಇನ್‌ ಸ್ಪೆಕ್ಟರ್‌ ಆತನ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಆರೋಪಿ ಮಹಮದ್ ಮುಕ್ತಾರ್ 15 ಪ್ರಕರಣಗಳಲ್ಲಿ ಆರೋಪಿ. ಕೆಲವು ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿತ್ತು. ಆತನನ್ನು ಉಳ್ಳಾಲ ಪೊಲೀಸರು ಶನಿವಾರ ಮಧ್ಯಾಹ್ನ ವಶಕ್ಕೆ ಪಡೆದಿದ್ದರು.

ಪ್ರಕರಣವೊಂದರಲ್ಲಿ ಬಳಸಿದ ವಾಹನ ಜಪ್ತಿ ಮಾಡಲು ಹಾಗೂ ಇತರ ಆರೋಪಿಗಳ ಪತ್ತೆ ಸಲುವಾಗಿ ಪೊಲೀಸರು ಆತನನ್ನು ಅಸೈಗೋಳಿಗೆ ಕರೆ ತಂದಿದ್ದರು. ಈ ವೇಳೆ ಆರೋಪಿಯು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ತೋರಿಸುವುದಾಗಿ ಸ್ಥಳಕ್ಕೆ ಕರೆದೊಯ್ದಿದ್ದ. ಏಕಾಏಕಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.