ಮನೆ ರಾಜ್ಯ ‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

0

ಬೆಂಗಳೂರು(Bengaluru): ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಶನಿವಾರ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿಗಳು  ತ್ರಿವರ್ಣ ಬಣ್ಣದ ಬಲೂನ್‌ ಆಕಾಶಕ್ಕೆ ಹಾರಿಸಿ ಬಿಡುವ ಮೂಲಕ ಚಾಲನೆ ನೀಡಿದರು. ಈ ವೇಳೆ ತ್ರಿವರ್ಣ ಧ್ವಜ ಹಿಡಿದು ಸಾವಿರಾರು ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದರು.

ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ, ಮನೆ ಮನೆಯ ಮೇಲೆ ರಾಷ್ಟ್ರಧ್ವಜ ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ. ಆ. 13ರಿಂದ 15ರವರೆಗೆ ಮೂರು ದಿನ ದೇಶದ 40 ಕೋಟಿ ಮನೆಗಳ ಮೇಲೆ ಇವತ್ತು ರಾಷ್ಟ್ರಧ್ವಜ ರಾರಾಜಿಸಲಿದೆ. ಈ ಕಾರ್ಯಕ್ರಮವನ್ನು ಐತಿಹಾಸಿಕ ಮೆಟ್ಟಿಲುಗಳ ಮೇಲೆ ಎಲ್ಲರೂ ಸೇರಿ ಮಾಡುತ್ತಿದ್ದೇವೆ ಎಂದರು.

ಭವ್ಯ ಭಾರತದ ನಿರ್ಮಾಣಕ್ಕೆ, ಸಮಪಾಲು, ಸಮಬಾಳಿನ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಇಂದು ಸಂಕಲ್ಪ ಮಾಡಬೇಕಿದೆ ಎಂದು ಕರೆ ನೀಡಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿರುವ ಬಹಳ ಜನರಿಗೆ ಒಳಗೆ ಬಂದು (ವಿಧಾನಸೌಧದ) ಈ ರಾಜ್ಯವನ್ನು ಆಳುವ ಶಕ್ತಿ ಇದೆ. ಅಂಥ ಶಕ್ತಿಯನ್ನು ಭಗವಂತ ನಿಮಗೆ ಕೊಡಲಿ. ಈ ದೇಶವನ್ನು ಕಟ್ಟುವ ಶಕ್ತಿಯನ್ನು ಭಗವಂತ ಕೊಡಲಿ. ಎಲ್ಲರಿಗೂ 75ರ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಶುಭಾಶಯ ಕೋರುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್‌ ಸಭಾಪತಿ ರಘುನಾಥ ಮಲ್ಕಾಪುರೆ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ಕುಮಾರ್‌, ಅಬಕಾರಿ ಸಚಿವ ಕೆ. ಗೋಪಾಲಯ್ಯ ಇದ್ದರು.