ಮನೆ ಕಾನೂನು ಕರ್ನಾಟಕ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಿಂದ ಪ್ರಮಾಣ ವಚನ ಬೋಧನೆ

ಕರ್ನಾಟಕ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಿಂದ ಪ್ರಮಾಣ ವಚನ ಬೋಧನೆ

0

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ಟಿ ಜಿ ಶಿವಶಂಕರೇಗೌಡ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಅನಿಲ್‌ ಭೀಮಸೇನ ಕಟ್ಟಿ, ಗುರುಸಿದ್ದಯ್ಯ ಬಸವರಾಜ ಮತ್ತು ಉಮೇಶ್‌ ಮಂಜುನಾಥ್‌ ಭಟ್‌ ಅಡಿಗ ಅವರಿಗೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಅವರು ಮಂಗಳವಾರ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರಿನ ರಾಜಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.

ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಮೇಲಿನ ಐವರು ನ್ಯಾಯಮೂರ್ತಿಗಳ ಹೆಸರನ್ನು ಜುಲೈ 19ರಂದು ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಇದರ ಅನ್ವಯ ಇವರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಆಗಸ್ಟ್‌ 12ರಂದು ಅಧಿಸೂಚನೆ ಹೊರಡಿಸಿತ್ತು.

ನ್ಯಾ. ಅನಿಲ್‌ ಕಟ್ಟಿ ಅವರು ತಾವು ಅಧಿಕಾರ ವಹಿಸಿಕೊಳ್ಳುವ ದಿನದಿಂದ 2024ರ ಏಪ್ರಿಲ್‌ 16ರವರೆಗೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರಲಿದ್ದಾರೆ. ನ್ಯಾಯಾಧೀಶರಾದ ಜಿ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ್‌ ಮಂಜುನಾಥ್‌ಭಟ್‌ ಅಡಿಗ ಮತ್ತು ಟಿ ಜಿ ಶಿವಶಂಕರೇಗೌಡ ಅವರು ಅಧಿಕಾರವಹಿಸಿಕೊಂಡ ದಿನದಿಂದ ಎರಡು ವರ್ಷಗಳವರೆಗೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿರಲಿದ್ದಾರೆ.

ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆಯು 49ಕ್ಕೆ ಏರಿಕೆಯಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿವೆ.