ಮನೆ ರಾಜಕೀಯ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಿಲ್ಲ: ಆರ್.ಅಶೋಕ್

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಿಲ್ಲ: ಆರ್.ಅಶೋಕ್

0

ಬೆಂಗಳೂರು(Bengaluru): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು  ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಚಾಮರಾಜಪೇಟೆ ಮೈದಾನದಲ್ಲಿ ಆಗಸ್ಟ್ 15ಕ್ಕೆ ಯಾವುದೇ ಗೊಂದಲ ಆಗದಂತೆ ಧ್ವಜಾರೋಹಣ ನೆರವೇರಿಸಿದ್ದೇವೆ. ಹೇಗೆ ನಿಭಾಯಿಸಬೇಕು ಎಂದು ನಮಗೆ ಗೊತ್ತಿದೆ ಎಂದರು.

ಆದರೆ, ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಇನ್ನು ನಿರ್ಧಾರ ಮಾಡಿಲ್ಲ. ಸೂಕ್ತ ಸಮಯದಲ್ಲಿ ತೀರ್ಮಾನ ಮಾಡ್ತೇವೆ. 75 ವರ್ಷ ಹಬ್ಬ ಆಚರಣೆ ಮಾಡಿರಲಿಲ್ಲ. ಈಗ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೇವೆ ಎಂದು ತಿಳಿಸಿದರು.

ಇನ್ನು ಇದೇ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪತ್ರ ಬರೆದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ. ಕಾರ್ಪೊರೇಷನ್ ಅಧಿಕಾರಿಗಳು ಗಣೇಶ ಹಬ್ಬದ ಸಂಬಂಧ ಇಂದು ಒಟ್ಟಾರೆ ಸಭೆ ಮಾಡುತ್ತಾರೆ. ಸೂಕ್ತ ಸಮಯದಲ್ಲಿ ನಾವು ತೀರ್ಮಾನ ಮಾಡುತ್ತೇವೆ ಎಂದರು.

ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ 224 ಶಾಸಕರು ಇದ್ದಾರೆಂದು ಹೇಳಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ, ಡಿಕೆಶಿ ಯವರು ಕೂಡ ಇದ್ದಾರೆ ಎಂಬುದು ಸಾಬೀತಾಗಿದೆ ಎಂದು ತಿರುಗೇಟು ನೀಡಿದರು.

ಕೆಂಪಣ್ಣ ಅವರ ಬಳಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳು ಇದ್ದರೆ ಅದನ್ನು ಲೋಕಾಯುಕ್ತಕ್ಕೆ ಕೊಡಲಿ. ರಾಜ್ಯ ಸರ್ಕಾರದ ಯಾವ ಸಚಿವರು ಅವರನ್ನು ಬೆದರಿಸುತ್ತಾರೋ ಅವರ ಬಗ್ಗೆಯೂ ಲೋಕಾಯುಕ್ತಕ್ಕೆ ಮಾಹಿತಿ ಕೊಡಲಿ.ಅದರ ಹೊರತಾಗಿ ಪ್ರತಿದಿನ ಕೇವಲ ಗಾಳಿಯಲ್ಲಿ ಗುಂಡು ಹೊಡೆದ್ರೆ ಏನು ಮಾಡಲು ಆಗುತ್ತದೆ ಎಂದು ಪ್ರಶ್ನಿಸಿದರು.