ಮನೆ ಮನರಂಜನೆ ಬಾನಿಗೆ ಹಾರಲು ಸಿದ್ಧವಾಗಿದೆ ಪುನೀತ್‌ ಹೆಸರಿನ ಉಪಗ್ರಹ

ಬಾನಿಗೆ ಹಾರಲು ಸಿದ್ಧವಾಗಿದೆ ಪುನೀತ್‌ ಹೆಸರಿನ ಉಪಗ್ರಹ

0

ಬೆಂಗಳೂರು (Bengaluru): ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಹೆಸರಿನ ಉಪಗ್ರಹಗಳು ಬಾನಿಗೆ ಹಾರಲು ಸಿದ್ಧವಾಗಿವೆ. ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ವಿದ್ಯಾರ್ಥಿಗಳೇ ನಿರ್ಮಿಸಿರೋ ಉಪಗ್ರಹವನ್ನು ಉಡಾವಣೆ ಮಾಡಲು ಸರ್ಕಾರ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ ‘ಪುನೀತ್’ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಈ ವಿಷಯವನ್ನು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಇದರಲ್ಲಿ ಬೆಂಗಳೂರುವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ‘ಕೆಜಿಎಸ್3 ಸ್ಯಾಟ್’ ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ನೆನಪಿಗಾಗಿ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ.

ಈ ಉಪಗ್ರಹ ಯೋಜನೆಯ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುತ್ತದೆ.

ಸ್ಪರ್ಧೆಯ ಹಿನ್ನೆಲೆಯಲ್ಲಿ ಪ್ರೌಢಶಾಲಾ ಮಕ್ಕಳಿಗೆ ಆನ್‌ಲೈನ್‌ ರಸಪ್ರಶ್ನೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಸುಮಾರು 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೂಡ ಕೊಡಲಾಗಿದೆ.