ಮನೆ ರಾಜ್ಯ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

0

ಬೆಂಗಳೂರು(Bengaluru): ರಾಜ್ಯ ಸರ್ಕಾರದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದ ಸಂದರ್ಭದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು.

ಬಳಿಕ ಅವರನ್ನು ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಉಮೇಶ ಕತ್ತಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಸಚಿವ ಕತ್ತಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಹದೇವಪುರದಲ್ಲಿ ಮಳೆ ಹಾನಿ ಪರಿಶೀಲನೆಯಲ್ಲಿದ್ದ ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ದೌಡಾಯಿಸಿದ್ದರು. ಆರೋಗ್ಯ ಸಚಿವ ಸುಧಾಕರ್, ಕಂದಾಯ ಸಚಿವ ಆರ್‌.ಅಶೋಕ್ ಕೂಡಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಉಮೇಶ್‌ ಕತ್ತಿ ಅವರಿಗೆ ಪತ್ನಿ ಶೀಲಾ, ಮಗ ನಿಖಿಲ್‌, ಮಗಳು ಸ್ನೇಹಾ ಇದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ 1961ರ ಮಾರ್ಚ್‌ 14ರಂದು ಜನಿಸಿದ್ದ ಉಮೇಶ್ ಕತ್ತಿ ಅವರು ಬಿ.ಎ. ಪದವಿ ಪಡೆದಿದ್ದರು. ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಆರು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಮೂಲತಃ ಜನತಾ ಪರಿವಾರದವರಾದ ಕತ್ತಿ ಅವರು ನಂತರ ಬಿಜೆಪಿ ಸೇರಿದ್ದರು.  1996ರಿಂದ 1999ರವರೆಗೆ ಸಕ್ಕರೆ ಸಚಿವರಾಗಿ, 2008ರಿಂದ ಕೃಷಿ ಸಚಿವರಾಗಿ ಮತ್ತು 2010ರಿಂದ 2013ರವರೆಗೆ ಕೃಷಿ ಸಚಿವರಾಗಿದ್ದರು. 2021ರ ಆಗಸ್ಟ್‌ನಿಂದ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉಮೇಶ ಕತ್ತಿ ಅವರು ಬೆಳಗಾವಿಯ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಮಾಲೀಕರೂ ಆಗಿದ್ದರು.ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.