ಮನೆ ರಾಜ್ಯ ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

0

ಗುಂಡ್ಲುಪೇಟೆ(Gundlupete): ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತ್ ಜೋಡೊ ಯಾತ್ರೆ ಸಂಬಂಧ ನಾಯಕರಿಗೆ ಸ್ವಾಗತ ಕೋರಲು ಅಳವಡಿಸಿದ್ದ ಫ್ಲೆಕ್ಸ್ ಗಳನ್ನೂ ಕಿಡಿಗೇಡಿಗಳು ರಾತ್ರೋರಾತ್ರಿ ಹರಿದು ಹಾಕಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಟ್ಟಣ ಊಟಿ ಸರ್ಕಲ್ ನಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಅದರ ಎರಡು ಬದಿಯಲ್ಲಿ ಅಳವಡಿಕೆ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ನಾಯಕರ 40ಕ್ಕೂ ಅಧಿಕ ಫ್ಲೇಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.ಈ ವಿಚಾರದ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಪೊಲೀಸರೇ ನೇರ ಹೊಣೆ: ಈ ಕುರಿತು ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶಪ್ರಸಾದ್ ಪ್ರತಿಕ್ರಿಯೆ ನೀಡಿ, ಭಾರತ್ ಜೋಡೊ ಯಾತ್ರೆ ಗುಂಡ್ಲುಪೇಟೆಯಿಂದ ಆರಂಭವಾಗುತ್ತಿರುವ ಕಾರಣ ಯಾತ್ರೆ ತಡೆಯಬೇಕು ಎಂಬ ಉದ್ದೇಶದಿಂದ ದುಷ್ಕರ್ಮಿಗಳು ರಾತ್ರೋರಾತ್ರಿ ಫ್ಲೆಕ್ಸ್ ಗಳನ್ನು ಹರಿದು ಹಾಕಿದ್ದಾರೆ. ಇದ್ಯಾವುದಕ್ಕೂ ನಾವು ಹೆದರುವುದಿಲ್ಲ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಪಟ್ಟಣದ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ದುಷ್ಕರ್ಮಿಗಳು ಫ್ಲೆಕ್ಸ್ ಹರಿದು ಹಾಕಲು ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಸೂಕ್ತ ಭದ್ರತೆ ನೀಡಲು ವಿಫಲರಾಗಿದ್ದಾರೆ. ಈ ಅವಘಡಕ್ಕೆ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರ ಹಾಕಿದರು.

ಬಿಜೆಪಿ ಕಾರ್ಯಕರ್ತರು ಫ್ಲೆಕ್ಸ್ ಹರಿದಿಲ್ಲ: ಬಿಜೆಪಿ‌ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ‘ನಾನು‌ಬೆಳಿಗ್ಗೆ ಇನ್ ಸ್ಪೆಕ್ಟರ್ ಜೊತೆ ಮಾತನಾಡಿದ್ದೇನೆ. ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದೇನೆ. ನಮ್ಮ ಕಾರ್ಯಕರ್ತರನ್ನು ವಿಚಾರಿಸಿದ್ದೇನೆ. ನಮ್ಮವರು ಯಾರೂ ಮಾಡಿಲ್ಲ. ಪ್ರಚಾರಕ್ಕಾಗಿ ಕಾಂಗ್ರೆಸ್‌ನವರೇ‌ ಮಾಡಿರುವ ಸಾಧ್ಯತೆ ‌ಇದೆ. ಪೊಲೀಸರು ತನಿಖೆ ನಡೆಸಲಿದ್ದಾರೆ. ಯಾರೇ ಮಾಡಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.