ಮನೆ ರಾಜಕೀಯ ಸಂಪುಟ ವಿಸ್ತರಣೆ: ಈ ವಾರವೇ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ: ಈ ವಾರವೇ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲು ಈ ವಾರವೇ ದೆಹಲಿಗೆ ಹೋಗಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಂಪುಟ ವಿಸ್ತರಣೆ ಸದ್ಯದಲ್ಲಿಯೇ ಆಗಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೀಡಿರುವ ಹೇಳಿಕೆ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಜನಸಂಕಲ್ಪ ಯಾತ್ರೆಯ ಮಧ್ಯೆಯೇ, ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟ ತಕ್ಷಣವೇ ದೆಹಲಿಗೆ ಹೋಗುತ್ತೇನೆ ಎಂದು ಹೇಳಿದರು.

ಶಾಸಕ ರಮೇಶ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅವರು ಅವರ ಕ್ಷೇತ್ರದ ಹಲವು ಕೆಲಸಕ್ಕೆ ಬಂದಿದ್ದರು. ಆರ್‌ಡಿಪಿಆರ್‌ ಮತ್ತು ಲೋಕೋಪಯೋಗಿ ರಸ್ತೆಗಳ ಬಗ್ಗೆ ಮಾತನಾಡಲು ಬಂದಿದ್ದರು ಎಂದರು.

ಒಕ್ಕಲಿಗ ಸಮುದಾಯಕ್ಕೆ ಶೇ 12ರಷ್ಟು ಮೀಸಲಾತಿ ನೀಡುವಂತೆ ನಿರ್ಮಲಾನಂದನಾಥ ಶ್ರೀಗಳು ಬೇಡಿಕೆ ಇಟ್ಟಿರುವ ಬಗ್ಗೆ ಮಾತನಾಡಿದ ಅವರು, ಯಾವುದೇ ಸಮುದಾಯ ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಆದರೆ, ಅದಕ್ಕೆ ಕಾನೂನು ಚೌಕಟ್ಟಿದೆ. ಬೇರೆ ಬೇರೆ ತೀರ್ಪುಗಳಿವೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಇದೆ. ಅವುಗಳ ಆಧಾರದಲ್ಲಿ ಮಾಡಬೇಕಾಗುತ್ತದೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ: ನಗರದ ಲುಲು ಗ್ಲೋಬಲ್‌ ಮಾಲ್‌ ಬಳಿ ಸೋಮವಾರ ಸಂಭವಿಸಿದ ಅಫಘಾತ ಯಾವ ಕಾರಣಕ್ಕೆ ನಡೆದಿದೆ ಎಂದು ತನಿಖೆ ನಡೆಸಿ ಪ್ರಾಥಮಿಕ ವರದಿ ನೀಡುವಂತೆ ಪೊಲೀಸರಿಗೆ ತಿಳಿಸಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದೂ ಮುಖ್ಯಮಂತ್ರಿ ತಿಳಿಸಿದರು.