ಮನೆ ರಾಜ್ಯ ಮುರುಘಾ ಶ್ರೀಗಳು ಅಕ್ಷಮ್ಯ ಅಪರಾಧ ಮಾಡಿದ್ದಾರೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ಮುರುಘಾ ಶ್ರೀಗಳು ಅಕ್ಷಮ್ಯ ಅಪರಾಧ ಮಾಡಿದ್ದಾರೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

0

ಉಡುಪಿ(Udupi): ಮುರುಘಾ ಶ್ರೀಗಳು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳು ಅಪರಾಧ ಮಾಡಿರುವ ಬಗ್ಗೆ ಜಗತ್ತಿಗೆ ಗೊತ್ತಿದೆ. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ನಾನು ಮತ್ತು ಮುಖ್ಯಮಂತ್ರಿಗಳು ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ. ನಮಗೆ ಹಿಂದೆಂದೂ ಇಲ್ಲದ ಸ್ವಾಗತ ಸಿಕ್ಕಿದೆ. ಕರಾವಳಿ ಭಾಗದಲ್ಲಿ ನೂರಕ್ಕೆ ನೂರು ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲ್ಲುತ್ತಾರೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ಅಶ್ಲೀಲ ಪದ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್​ನವರು ಇದನ್ನು ಖಂಡಿಸಿದ್ದಾರೆ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ. ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಬಿಎಸ್​ವೈ ಸಲಹೆ ನೀಡಿದರು.

ಚುನಾವಣೆಯಲ್ಲಿ ಗೆದ್ದು ಖರ್ಗೆಗೆ ಗಿಫ್ಟ್ ಕೊಡುತ್ತೇವೆ ಎಂದಿರುವ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವುದು ಅಸಾಧ್ಯ. ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಹೊರಟಾಗ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಸಿಗಲಿದೆ. ಕರ್ನಾಟಕದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.