ಮನೆ ರಾಜ್ಯ ಸಮಾಜದಲ್ಲಿ ಭಯ ಉಂಟುಮಾಡುವ ಸಂಘಟನೆಗಳ ಬಗ್ಗೆ ಮೃದು ಧೋರಣೆ ಇಲ್ಲ: ಸಚಿವ ವಿ.ಸುನಿಲ್ ಕುಮಾರ್

ಸಮಾಜದಲ್ಲಿ ಭಯ ಉಂಟುಮಾಡುವ ಸಂಘಟನೆಗಳ ಬಗ್ಗೆ ಮೃದು ಧೋರಣೆ ಇಲ್ಲ: ಸಚಿವ ವಿ.ಸುನಿಲ್ ಕುಮಾರ್

0

ಮಂಗಳೂರು(Mangalore): ಸಮಾಜದಲ್ಲಿ ಭಯವನ್ನುಂಟು ಮಾಡುವ ಸಂಘಟನೆಗಳ ಬಗ್ಗೆ ನಮ್ಮ ಸರ್ಕಾರ ಮೃದು ಧೋರಣೆಯನ್ನು ತೆಗೆದುಕೊಳ್ಳುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು.

ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಸಮಾಜದಲ್ಲಿ ಭಯದ ವಾತಾವರಣ ನಿರ್ಮಿಸಲು ರೂಪಿಸಿದ ಸಂಚುಗಳನ್ನು ವಿಫಲಗೊಳಿಸಲು ಸರ್ಕಾರ ದಿಟ್ಟತನದ ಕ್ರಮ ಕೈಗೊಳ್ಳುತ್ತಲೇ ಬಂದಿದೆ. ಶಿವಮೊಗ್ಗದ ಘಟನೆ ಹಾಗೂ ನೆಟ್ಟಾರಿನ ಘಟನೆಗಳು ನಡೆದ ನಂತರ ಇಂತಹ ಚಟುವಟಿಕೆಗೆ ಕಡಿವಾಣ ಹಾಕಲು ಪಿಎಫ್’ಐನಂತಹ ಸಂಘಟನೆಗಳನ್ನು ನಿಷೇಧ ಮಾಡಿ ದ್ದು ಇದರ ಒಂದು ಭಾಗ. ಯಾವುದೇ ಕಾರಣಕ್ಕೂ ಸಮಾಜಘಾತುಕ ಶಕ್ತಿಗಳನ್ನು ಬೆಳೆಯಲಿಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ರಿಕ್ಷಾ ಚಾಲಕನ ಚಿಕಿತ್ಸಾ ವೆಚ್ಚವನ್ನು ಬಿಜೆಪಿ ಭರಿಸಲಿದೆ:

ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದಿಂದ ಗಾಯಗೊಂಡಿರುವ ರಿಕ್ಷಾ ಚಾಲಕ ಪುರುಷೋತ್ತಮ ಅವರ ಚಿಕಿತ್ಸೆ ವೆಚ್ಚವನ್ನು ಜನಪ್ರತಿನಿಧಿಗಳು ಸೇರಿ ಬಿಜೆಪಿಯಿಂದ ಭರಿಸಲಿದ್ದೇವೆ. ಅವರಿಗೆ ಸರ್ಕಾರದಿಂದ ಪರಿಹಾರ ನೀಡುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು

ಈ ಘಟನೆಯನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಈ ಘಟನೆ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆಹಚ್ಚಲು ಹಾಗೂ ಇದರ ಆಳ ಮತ್ತು ಅಗಲವನ್ನು ಅರಿತು, ಈ ಪ್ರಕರಣವನ್ನು ಸಂಪೂರ್ಣವಾಗಿ ಭೇದಿಸುವ ಉದ್ದೇಶದಿಂದ ಇದರ ತನಿಖೆಯನ್ನು ರಾಷ್ಟ್ರೀಯ ತನಿಖೆ ಸಂಸ್ಥೆಗೆ ಹಸ್ತಾಂತರ ಮಾಡಲಾಗಿದೆ ಎಂದರು.

ರಾಷ್ಟ್ರೀಯ ತನಿಖೆ ಸಂಸ್ಥೆ ಮೇಲೆ ಹಾಗೂ ಪೊಲೀಸರ ಮೇಲೆ ವಿಶ್ವಾಸ ಇದೆ. ಇಂತಹ ಸಂಘಟನೆಗಳು ಮತ್ತೆ ಚಿಗುರೊಡೆಯಲಿಕ್ಕೆ ಅವರು ಬಿಡುವುದಿಲ್ಲ ಎಂದು ಹೇಳಿದರು.

ಎನ್’ಐಎ ಘಟಕ ಇಲ್ಲಿ ಸ್ಥಾಪನೆ ಆಗಬೇಕು. ಖಂಡಿತ ಇವತ್ತಲ್ಲ ನಾಳೆ ಇದು ಆಗಲಿದೆ‌‌. ಕೇಂದ್ರ ಸರ್ಕಾರವು ಪೂರಕವಾಗಿ ಸ್ಪಂದಿಸಿದೆ. ಅದಕ್ಕಿಂತಲೂ ಹೆಚ್ಚಾಗಿ ಈ ರೀತಿಯ ಘಟನೆಗಳನ್ನು ತಡೆಯಲು ಏನೇನು ಕ್ರಮ ಕೈಗೊಳ್ಳಬೇಕೋ, ಅದನ್ನು ತೆಗೆದುಕೊಂಡಿದ್ದೇವೆ ಎಂದರು.

ಮೇಯರ್ ಜಯಾನಂದ ಅಂಚನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಜೊತೆಯಲ್ಲಿದ್ದರು.