ಮನೆ ರಾಜಕೀಯ ಸಂಸದ ಪ್ರತಾಪ್ ಸಿಂಹ ವಿರುದ್ಧ ಲೋಕಾಯುಕ್ತಕ್ಕೆ ದೂರು: ಎಂ.ಲಕ್ಷ್ಮಣ್

ಸಂಸದ ಪ್ರತಾಪ್ ಸಿಂಹ ವಿರುದ್ಧ ಲೋಕಾಯುಕ್ತಕ್ಕೆ ದೂರು: ಎಂ.ಲಕ್ಷ್ಮಣ್

0

ಮೈಸೂರು(Mysuru): ಕುಲಪತಿಯಾಗಲು ₹ 5 ಕೋಟಿ, ₹ 6 ಕೋಟಿ ದುಡ್ಡು ತೆಗೆದುಕೊಂಡರೆ ಆತ ಏನಾಗುತ್ತಾನೆ? ಬೇರೆ ವ್ಯವಹಾರ ಮಾಡಲೇಬೇಕಾಗುತ್ತದೆ ಎಂದು ಸಂಸದ ಪ್ರತಾಪ ಸಿಂಹ ನೀಡಿರುವ ಹೇಳಿಕೆ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಿದ್ದೇನೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಿ ಬುಕ್ಸ್‌–ಸ್ಮಾರ್ಟ್‌’ಕೀ ವತಿಯಿಂದ ಬೆಂಗಳೂರಿನಲ್ಲಿ ಜುಲೈ ತಿಂಗಳಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕುಲಪತಿಗಳ ನೇಮಕಾತಿಯಲ್ಲಿನ ಭ್ರಷ್ಟಾಚಾರದ ಕುರಿತು ಪ್ರತಾಪ್ ಮಾತನಾಡಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದನ್ನು ಆಧರಿಸಿ ದೂರು ನೀಡಲಿದ್ದೇನೆ ಎಂದು ತಿಳಿಸಿದರು.

ಇಂಗ್ಲಿಷ್‌’ನಲ್ಲಿ ಒಂದು ವಾಕ್ಯ ಬರೆಯಲು ಗೊತ್ತಿಲ್ಲದವರು ಕೆ–ಸೆಟ್ ಪಾಸಾಗಿದ್ದಾರೆ. ಅವರು ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾದರೆ, ಯಾವ ರೀತಿ ಪಾಠ ಮಾಡಬಹುದು? ಕೆ–ಸೆಟ್ ಪರೀಕ್ಷೆಯಲ್ಲಿ ಗೋಲ್‌’ಮಾಲ್ ನಡೆಯುತ್ತಿದೆ. ಹೀಗಾಗಿ, ಮೈಸೂರು ವಿಶ್ವವಿದ್ಯಾಲಯದ ವಿರುದ್ಧವೇ ಯುಜಿಸಿ ಅಧ್ಯಕ್ಷರಿಗೆ ದೂರು ಕೊಟ್ಟು ವಿಚಾರಣೆಗೆ ಹಾಕಿಸಿದ್ದೇನೆ. ನಾವು ಕಮಿಷನ್‌ ಪಡೆಯದೇ ರಾಜಕಾರಣ ಮಾಡುತ್ತಿದ್ದೀವಾ? ಭ್ರಷ್ಟಾಚಾರ ಮುಕ್ತ ರಾಜಕಾರಣದ ಬಗ್ಗೆಯೂ ಫೋಕಸ್ ಮಾಡಬೇಕಿದೆ ಎಂದೆಲ್ಲಾ ಹೇಳಿದ್ದಾರೆ. ಇದೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಲೋಕಾಯುಕ್ತವನ್ನು ಕೋರಲಾಗುವುದು ಎಂದರು.

ಲೋಕಾಯುಕ್ತ ಪೊಲೀಸರು 15 ದಿನಗಳಲ್ಲಿ ಕ್ರಮ ವಹಿಸದಿದ್ದಲ್ಲಿ, ಹೈಕೋರ್ಟ್‌ ಮೊರೆ ಹೋಗುತ್ತೇನೆ ಎಂದು ತಿಳಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಹೇಳುತ್ತಿರುವುದನ್ನು ಗಮನಿಸಿದರೆ, ರಾಜ್ಯಪಾಲರ ಕಚೇರಿಯೂ ಭ್ರಷ್ಟಾಚಾರದಿಂದ ತುಂಬಿ ತುಳುಕುತ್ತಿದೆ ಎಂದರ್ಥವೇ? ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: 

ಐಟಿ, ಸಿಬಿಐ, ಇಡಿಯಂತಹ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ಮೇಲೆ ಆಗಾಗ ದಾಳಿ ನಡೆಸುತ್ತಲೇ ಇದೆ. ನಾವು ಇದಕ್ಕೆಲ್ಲಾ ಜಗ್ಗುವುದಿಲ್ಲ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್‌’ನ 21 ಪ್ರಮುಖರನ್ನು ಬಿಜೆಪಿಯವರು ‍ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ. ಇಲ್ಲದಿದ್ದರೆ, ಐಟಿ ದಾಳಿ ಮಾಡಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದರು.