ಮನೆ ಸಾಹಿತ್ಯ ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಅವರ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಅವರ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

0

ದೆಹಲಿ(Delhi): ಕನ್ನಡದ ಹೆಸರಾಂತ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ `ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಹಾಗೂ ಪದ್ಮರಾಜ ದಂಡಾವತಿ  ಅವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮೆ ಪ್ರಶಸ್ತಿ ದೊರೆತಿದೆ.

ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ, ಅನುವಾದ ಪ್ರಶಸ್ತಿ 50 ಸಾವಿರ ರೂ ಹಾಗೂ ಸನ್ಮಾನಗಳು ಒಳಗೊಂಡಿದೆ.

‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನವು ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷ್’ನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿಯನ್ನು ಪ್ರಕಟಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಈ ಪ್ರಶಸ್ತಿ ಆಯ್ಕೆಯು ನಡೆಯಿತು. ಅನುವಾದ ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ಕೆಲಸ ನಿರ್ವಹಿಸಿದ್ದರೆ ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಡಾ.ಸಿ ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ಜ್ಯೂರಿಗಳಾಗಿದ್ದರು.

ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.