ಮನೆ ಅಪರಾಧ ಮೈಸೂರು: ಪದವೀಧರೆ ಮೇಲೆ ಅತ್ಯಾಚಾರ, ಬಲವಂತದ ವಿವಾಹ, ಜಾತಿ ನಿಂದನೆ- ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ...

ಮೈಸೂರು: ಪದವೀಧರೆ ಮೇಲೆ ಅತ್ಯಾಚಾರ, ಬಲವಂತದ ವಿವಾಹ, ಜಾತಿ ನಿಂದನೆ- ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲು

0

ಮೈಸೂರು(Mysuru): ಪದವೀಧರ ಯುವತಿಗೆ ಕೆಲಸ ನೀಡುವ ಭರವಸೆ ನೀಡಿ, ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾದ ನಂತರ ಜಾತಿ ನಿಂದನೆ ಮಾಡಿರುವ ಬಗ್ಗೆ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿದೆ.

ಫೈನಾನ್ಶಿಯಲ್ ಅಸಿಸ್ಟೆಂಟ್ ಹುದ್ದೆಗೆ ಬೇಕಾಗಿದ್ದಾರೆ ಎಂದು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದು, ಜಾಹೀರಾತು ನೋಡಿ ಕೆಲಸಕ್ಕೆ  ಬಂದ ಯುವತಿಗೆ ಜ್ಯೂಸ್‌’ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ನಡೆಸಿ, ಚಿತ್ರಗಳನ್ನು ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಯುವತಿ ಆರೋಪಿಸಿ ದೂರು ನೀಡಿದ್ದಾರೆ. ಒಡನಾಡಿ ಸೇವಾಸಂಸ್ಥೆಯ ಆಶ್ರಯದಲ್ಲಿರುವ ಯುವತಿಯು ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿ ಬಳಿಕ ಬಲವಂತವಾಗಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಒಂದು ದಿನದಲ್ಲೇ ತವರು ಮನೆಗೆ ತೆರಳಿದ್ದೆ. ಆ ಸಂದರ್ಭದಲ್ಲಿ ತವರು ಮನೆಗೆ ಬಂದು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದರು. ನಂತರ ವಿಜಯನಗರ ಮನೆಯಿಂದ ಹೊರಹಾಕಿದ್ದರು. ಮತ್ತೆ ಕೆಲ ದಿನಗಳ ನಂತರ ಹೋಟೆಲ್‌’ಗೆ ಕರೆಯಿಸಿಕೊಂಡು ಅತ್ಯಾಚಾರ ನಡೆಸಿದ್ದಾರೆ. ಬಳಿಕ ಕುವೆಂಪುನಗರದ ಅಪಾರ್ಟ್‌’ಮೆಂಟ್‌ವೊಂದರಲ್ಲಿ 2020 ಮಾರ್ಚ್ ನಿಂದ ಒಟ್ಟಿಗೆ ಜೀವನ ನಡೆಸಲು ಪ್ರಾರಂಭಿಸಿದಾಗ ವರದಕ್ಷಿಣೆ ನೀಡುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಸ್ಯಾಂಟ್ರೋ ರವಿಗೆ ಲೈಂಗಿಕ ಸೋಂಕು ಇತ್ತು. ಆದರೆ, ಆ ವಿಚಾರವನ್ನು ಮರೆಮಾಚಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ ಬಲವಂತವಾಗಿ ನನಗೆ ಗರ್ಭಪಾತ ಮಾಡಿಸಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವತಿ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಯುವತಿ ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಕಿರುಕುಳ, ಎಸ್’ಸಿ, ಎಸ್’ಟಿ ದೌರ್ಜನ್ಯ ತಡೆ ಕಾಯಿದೆ, ಐಪಿಸಿ 506, 498ಎ, 504, 376, 270, 313, 323ರಡಿ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ : ದಲಿತ ಯುವತಿಯ ಮೇಲೆ ದೌರ್ಜನ್ಯ ಎಸಗಿರುವ ಸ್ಯಾಂಟ್ರೋ ರವಿ ವಿರುದ್ದ ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ರವಿಗೆ ರಾಜಕಾರಣಿಗಳು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕ ಇದ್ದು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಆರೋಪಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸರ್ಕಾರವನ್ನೇ ಹೊಣೆ ಮಾಡಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.