ಮನೆ ಸುದ್ದಿ ಜಾಲ ನಮ್ಮದು ಬಡವರ, ದೀನದಲಿತರ, ಕಾರ್ಮಿಕರ ಪರವಾದ ಸರ್ಕಾರ: ಸಿಎಂ ಬಸವರಾಜ ಬೊಮ್ಮಾಯಿ

ನಮ್ಮದು ಬಡವರ, ದೀನದಲಿತರ, ಕಾರ್ಮಿಕರ ಪರವಾದ ಸರ್ಕಾರ: ಸಿಎಂ ಬಸವರಾಜ ಬೊಮ್ಮಾಯಿ

0

ಮೈಸೂರು: ನಮ್ಮದು ಬಡವರು, ದೀನ ದಲಿತರು ಹಾಗೂ ಕಾರ್ಮಿಕರ ಪರವಾದ ಸರ್ಕಾರ. ರಾಜ್ಯದ 54 ಲಕ್ಷ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಾರ್ಷಿಕ 10 ಸಾವಿರ ಸಹಾಯ ಧನವನ್ನು ರೈತರ ಖಾತೆಗಳಿಗೆ ನೇರವಾಗಿ ನೀಡಲಾಗುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

 ಜಿಲ್ಲಾಡಳಿತ ವತಿಯಿಂದ ಮಹಾರಾಜ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ 6 ಸಾವಿರ ಹಾಗೂ ರಾಜ್ಯ ಸರ್ಕಾರ 4 ಸಾವಿರ ರೂಗಳನ್ನು ನೀಡುತ್ತಿದೆ. ಮೈಸೂರು ಜಿಲ್ಲೆಯ ಜನತೆ ಸರ್ಕಾರದ ಒಂದಿಲ್ಲ ಒಂದು ಸೌಲಭ್ಯ ಪಡೆದಿರುವುದು ನಮ್ಮ ಸರ್ಕಾರಕ್ಕೆ ಸಂತಸ ತಂದಿದೆ. ಮುಂದೆಯೂ ನಮ್ಮ ಸರ್ಕಾರವು ಬಡವರ ಪರ ನೊಂದವರ ಪರ ಕೆಲಸ ನಿರ್ವಹಿಸುವ ಸಂಕಲ್ಪ ಹೊಂದಿದ್ದೇವೆ ಎಂದು ತಿಳಿಸಿದರು.

 ಕೋವಿಡ್ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರ್ಥವಾಗಿ ನಿರ್ವಹಸಿದೆ. ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ದೇಶದ 130 ಕೋಟಿ ಜನತೆಗೂ ಎರಡು ಡೋಸ್ಗಳ ಕೋವಿಡ್ ಲಸಿಕೆ ಉಚಿತವಾಗಿ ನೀಡಿದ್ದಾರೆ. ಸರ್ಕಾರವು ಯಾವ ಸಂದರ್ಭದಲ್ಲಿಯು ಕೂಡ ಸಾರ್ವಜನಿಕರ ಕೈಬಿಡದೆ ಜನಪರವಾಗಿ ಕರ್ತವ್ಯ ನಿರ್ವಹಿಸಿದೆ ಎಂದರು.

 ರಾಜ್ಯ ಸರ್ಕಾರದ ರೈತ ವಿಧ್ಯಾ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 13 ಲಕ್ಷ ಹಾಗೂ ಮೈಸೂರು ವಿಭಾಗದಲ್ಲಿ 20 ಸಾವಿರಕ್ಕೆ ಹೆಚ್ಚಿನ ರೈತರ ಮಕ್ಕಳಿಗೆ ಸಹಾಯಧನ ನೀಡಲಾಗುತ್ತಿದೆ, ರೈತರ ಹಾಗೂ ಕಾರ್ಮಿಕರ ಮಕ್ಕಳಿಗೆ 4 ಸಾವಿರ ವಿಶೇಷ ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗಿದೆ. ಆಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ 2 ಲಕ್ಷ ಸಹಾಯಧನ ನೀಡಲಾಗುತ್ತಿದ್ದು, ಪರಿಶಿಷ್ಟ ಜಾತಿಯವರಿಗೆ ಭೂ ಒಡೆತನ ಯೋಜನೆಯಡಿ ಭೂಮಿಕೊಳ್ಳಲು ಸರ್ಕಾರದಿಂದ 20 ಲಕ್ಷದವರಗೆ ಸಹಾಯಧನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

 ರಾಜ್ಯದಲ್ಲಿ 5.5 ಕೋಟಿ ಜನರಿಗೆ ಹಾಗೂ ಮೈಸೂರಿನ 18 ಲಕ್ಷ ಜನರಿಗೆ ಸರ್ಕಾರದ ಒಂದಿಲ್ಲೊಂದು ಯೋಜನೆಯಡಿ ಸೌಲಭ್ಯ ಪಡೆದುಕೊಂಡಿದ್ದಾರೆ. ಪಿ ಯು ಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ. ಸ್ತ್ರೀ ಸಾಮರ್ಥ್ಯ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ರಾಜ್ಯದ ಯುವಕರಿಗೆ ಅನುಕೂಲವಾಗುವಂತೆ ಸ್ವಾಮಿ ವಿವೇಕಾನಂದ ಯೋಜನೆಯಡಿ 2 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಶ್ರವಣ ದೋಷ ಇರುವ ಮಕ್ಕಳಿಗೆ ಉಚಿತವಾಗಿ ಶ್ರವಣ ಸಾಧನ ಅಳವಡಿಸಲು 500 ಕೋಟಿ ಮೀಸಲಿಡಲಾಗಿದ್ದು, ಡಯಾಲಿಸಿಸ್ ಮಾಡಿಸುವರಿಗೆ 1 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಕ್ಯಾನ್ಸರ್ಗೆ ಒಳಗಾದ ಬಡವರಿಗೆ ಕಿಮಿಯೋ ಥೆರಫಿ ಚಿಕಿತ್ಸೆಯನ್ನು ಉಚಿತವಾಗಿ ಮಾಡಿಸಲಾಗುತ್ತಿದೆ ಎಂದರು.

 ಪರಿಶಿಷ್ಟ ಜಾತಿಯವರಿಗೆ ಮೀಸಲಾತಿಯನ್ನು ಶೇಕಡಾ 15 ರಿಂದ 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇಕಡಾ 3 ರಿಂದ 7 ಮೀಸಲಾತಿ ಹೆಚ್ಚಿಸಲಾಗಿದೆ. ಹಿಂದುಳಿದ ವರ್ಗಗಳ ಬೆಳವಣಿಗೆಗೆ ಸರ್ಕಾರವು ಶ್ರಮಿಸುತ್ತದೆ ಎಂದರು. ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರಲು 1 ಸಾವಿರ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆದು ಕಡಿಮೆ ದರದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಕೆಂದ್ರ ಸರ್ಕಾರವು ಮಾಡಿದೆ ಎಂದರು.

 ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಮಾತನಾಡಿ, ಫಲಾನುಭವಿಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಹಣ ನೂರಕ್ಕೆ ನೂರರಷ್ಟು ತಲುಪಬೇಕು. ಸರ್ಕಾರದ ಎಲ್ಲಾ ಸವಲತ್ತುಗಳು ಸಿಗಬೇಕು. ಯಾರಿಗೂ ತೊಂದರೆ ಆಗಬಾರದೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಜಿಲ್ಲೆಯಲ್ಲೂ ಈ ಕಾರ್ಯಕ್ರಮ ಆಯೋಜಿಸಲಾಗುವುದು. ಚಿತ್ರದುರ್ಗ, ತುಮಕೂರು ನಂತರ ಮೈಸೂರಿನಲ್ಲಿ ಮೂರನೇ ಕಾರ್ಯಕ್ರಮ ಇದಾಗಿದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುತ್ತಿದ್ದು, ಫಲಾನುಭವಿಗಳ ಬಗ್ಗೆ ಸಿಎಂ ವಿಶೇಷ ಗಮನ ಹರಿಸಿದ್ದಾರೆ. ಜನಸಾಮಾನ್ಯರ ನೋವಿಗೆ, ಕಷ್ಟಕ್ಕೆ ಸ್ಪಂದಿಸುವ ಕಾರ್ಯಕ್ರಮ ಇದಾಗಿದೆ ಎಂದರು.

 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡುವ ಗುರಿ ಹೊಂದಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡಲಾಗುತ್ತಿದೆ. ಸಾಲ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆಗನುಗುಣವಾಗಿ ಈ ಸಾಲಿನ ಬಜೆಟ್ನಲ್ಲಿ ಸಾಲ ವಿತರಣೆ ಮೊತ್ತವನ್ನು 3 ಲಕ್ಷ ರೂ. ನಿಂದ 5 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

 ರಾಜ್ಯಾದ್ಯಂತ ರೈತರಿಗೆ ಹಲವು ಅನುಕೂಲ ಕಲ್ಪಿಸಲಾಗಿದೆ. ಸಾಲಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಒಂದೇ ಬ್ಯಾಂಕ್ನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತದೆ. ರೈತರ ಆರೋಗ್ಯದ ಹಿತದೃಷ್ಟಿಯಿಂದ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಲಾಗಿದೆ. ಯಶಸ್ವಿನಿ ಯೋಜನೆ ನೋಂದಣಿ ಅವಧಿಯನ್ನು ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದರು.

 ರಾಜ್ಯದಲ್ಲಿರುವ 5700ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದೇ ತಂತ್ರಾAಶ ಅಳವಡಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮತ್ತಷ್ಟು ಅಧಿಕಾರ ನೀಡಲು ಒಂದೇ ಮಾಡೆಲ್ ಬೈಲಾ ತರಲಾಗುತ್ತಿದೆ. ಇದರಿಂದ ಪೆಟ್ರೋಲ್ ಬಂಕ್, ಕಲ್ಯಾಣ ಮಂಟಪ ಆರಂಭದ ಜೊತೆಗೆ ಹಲವು ರೀತಿಯ ಆರ್ಥಿಕ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಎಲ್ ನಾಗೇಂದ್ರರವರು ಈ ಬಾರಿ ಬಜೆಟ್ನಲ್ಲಿ ರೈತರಿಗೆ ವಿಶೇಷವಾದ ಆದ್ಯತೆಯನ್ನು ನೀಡಿ ರೈತಪರವಾದ ಯೋಜನೆಗಳನ್ನು ಜಾರಿಗೆ ತರಲಾಗಿದೆ. ರೈತರ ಪರವಾಗಿ ನಮ್ಮ ಸರ್ಕಾರವು ಕಾರ್ಯನಿರ್ವಹಿಸಲಿದೆ ಎಂಬುದು ಸಾರ್ವಜನಿಕರಿಗೆ ತಿಳಿದಿದೆ. ಚಾಮರಾಜ ಕ್ಷೇತ್ರದಲ್ಲಿ 21880 ಜನರಿಗೆ ವೃದ್ದಾಪ್ಯ ವೇತನವನ್ನು ನೀಡಲಾಗುತ್ತಿದೆ ಎಂದರು.

 ಸರ್ಕಾರವು ಅಂಗವಿಕಲರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ, ವಿಧವೆಯರ ಜೀವನ ನಿರ್ವಾಹಣೆಗಾಗಿ ವಿಧವಾ ವೇತನವನ್ನು ಹೆಚ್ಚಿಸಲಾಗಿದೆ ಮುಂದಿನ ದಿನಗಳಲ್ಲಿ ಉತ್ತಮವಾದ ಆಡಳಿತ ನಿರ್ವಾಹಣೆ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ ಎ ರಾಮದಾಸ್, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಹರ್ಷವರ್ಧನ್, ವಿಧಾನ ಪರಿಷತ್ ಸದಸ್ಯರಾದ ಮುನಿ ಗೋಪಾಲಗೌಡ, ಮಹಾ ಪೌರರಾದ ಶಿವಕುಮಾರ್, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಕೋಟೆ ಶಿವಣ್ಣ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.