ಮನೆ ರಾಷ್ಟ್ರೀಯ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

0

ಅಗರ್ತಲಾ (ತ್ರಿಪುರಾ): ತ್ರಿಪುರಾ ವಿಧಾನಸಭೆಗೆ ಈಚೆಗಷ್ಟೇ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ್ದು, ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರಿಂದು ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದಾರೆ.

ಅಗರ್ತಲಾದ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಪಡೆದರು.

ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಸಿಪಿಎಂ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿವೆ.

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮಂಗಳವಾರವೇ ರಾಜ್ಯಕ್ಕೆ ಆಗಮಿಸಿದ್ದಾರೆ. ಅಗರ್ತಲಾದ ವಿವೇಕಾನಂದ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯದಲ್ಲಿ ಹೊಸದಾಗಿ ಚುನಾಯಿತರಾದ ಬಿಜೆಪಿ ಶಾಸಕರು ಸೋಮವಾರ ಶಾಸಕಾಂಗ ಪಕ್ಷದ ನಾಯಕನಾಗಿ ಸಹಾ ಹೆಸರನ್ನು ಸರ್ವಾನುಮತದಿಂದ ಅಂಗೀಕರಿಸಿದ್ದರು. ಇದರ ಬಳಿಕ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಡಾ.ಸಹಾ ಅವರೊಂದಿಗೆ ಶಾಸಕರು ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 60ರಲ್ಲಿ 32 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ತಿಪ್ರಾ ಮೋಥಾ 13 ಸ್ಥಾನಗಳನ್ನು ಪಡೆಯುವ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು.2022 ರಲ್ಲಿ ಬಿಪ್ಲಬ್ ದೇಬ್ ಬದಲಿಗೆ ಡಾ ಮಾಣಿಕ್ ಸಹಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು.

ಬಿಜೆಪಿಯಲ್ಲಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದ ಸಹಾ 2020 ರಲ್ಲಿ ರಾಜ್ಯದಲ್ಲಿ ಪಕ್ಷದ ಮುಖ್ಯಸ್ಥರಾಗಿದ್ದರು. ಆದಾಗ್ಯೂ ಅವರು ಮುಖ್ಯಮಂತ್ರಿಯಾಗುವ ಮೊದಲು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಟೌನ್ ಬರ್ಡೋವಾಲಿ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾದರು.

ಈ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಮಾಣಿಕ್ ಸಹಾ 2016ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರು ಮಾರ್ಚ್ 2022 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು.