ಮೈಸೂರು : ಈ ಬಾರಿ ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಹೆಚ್ಚಿನ ಸ್ಥಾನ ಗೆಲ್ಲಲಿದ್ದೇವೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದಿದ್ದು, ದಿನದಿನಕ್ಕೆ ಬಿಜೆಪಿ ಶಕ್ತಿಯುತವಾಗಿ ಹೊರಹೊಮ್ಮುತ್ತಿದೆ ಎಂದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ವಿಫಲವಾದಾಗ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ರಚನೆಯಾದಾಗ ಬಿಎಸ್ವೈ ಮುಖ್ಯಮಂತ್ರಿ ಆದರು. ನಂತರ ವಯಸ್ಸಿನ ಕಾರಣದಿಂದ ಹುದ್ದೆಗೆ ರಾಜೀನಾಮೆ ನೀಡಿ, ಅವರೇ ಸೂಚಿಸಿದ ಬಸವರಾಜ ಬೊಮ್ಮಾಯಿಯವರನ್ನ ಮುಖ್ಯಮಂತ್ರಿ ಮಾಡಲಾಯಿತು. ಅವರು ಒಳ್ಳೆಯ ಮನುಷ್ಯ, ಉತ್ತಮ ರೀತಿಯಲ್ಲಿ ಆಡಳಿತ ನೀಡುತ್ತಿದ್ದಾರೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ವರುಣಾಗೆ ನಾಮಪತ್ರ ಸಲ್ಲಿಸಲು ಮಾತ್ರ ಬರುತ್ತೇನೆ. ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರಾದರೂ ಒಂದು ಲಕ್ಷ ಮತಗಳಿಂದ ಗೆಲ್ಲಲು ಸಾಧ್ಯವೇ?. ಈ ರೀತಿ ದಡ್ಡರು ಹಾಗೂ ಮಾನಸಿಕ ರೋಗಿಗಳು ಮಾತ್ರ ಹೇಳಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನಾಯಕರು ಹೇಳುತ್ತಿರುವಂತೆ ರಾಜ್ಯದಲ್ಲಿ ಕಾಂಗ್ರೆಸ್ ಸದೃಢವಾಗಿಲ್ಲ ಹಾಗೂ ಸಮರ್ಥ ನಾಯಕರೂ ಇಲ್ಲ. ಸಿದ್ದರಾಮಯ್ಯ ಸುರಕ್ಷಿತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿ, ಕೊನೆಗೂ ವರುಣಾಗೆ ಬಂದು ನಿಂತಿದ್ದಾರೆ. ಕಾಂಗ್ರೆಸ್ ಸ್ಥಿತಿ ಮದ್ದೂರು ಷೆಟಲ್ ಟ್ರೈನ್ ರೀತಿಯಲ್ಲಿ ಇದೆ. ಅಂದರೆ ಬೆಂಗಳೂರಿನಿಂದ ಹೊರಟ ಟ್ರೈನ್ ಮದ್ದೂರನ್ನ ತಲುಪುತ್ತದೋ ಗೊತ್ತಿಲ್ಲ. ಆ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಥಿತಿ ಇದೆ ಎಂದರು.
ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬೇಕಾದರೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂಬ ಡಿ ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಶ್ರೀನಿವಾಸ್ ಪ್ರಸಾದ್, ಡಿ ಕೆ ಶಿವಕುಮಾರ್ ತಲೆ ಮೇಲೆ ಐಟಿ, ಇಡಿ ಕತ್ತಿ ತೂಗಾಡುತ್ತಿದೆ. ಯಾವಾಗ ಏನಾಗುತ್ತದೋ ಗೊತ್ತಿಲ್ಲ. ಒಂದು ಪಕ್ಷದ ಅಧ್ಯಕ್ಷರಾದವರು ಈ ರೀತಿ ಮಾತನಾಡುವುದು ಸರಿಯಲ್ಲ. ಇಂತವರು ರಾಜ್ಯದ ಮುಖ್ಯಮಂತ್ರಿ ಆದರೆ ಏನು ಗತಿ ಎಂದರು.













