ಮನೆ ಕಾನೂನು ಪ್ರತ್ಯೇಕ ಹಾಸ್ಟೆಲ್ ಗಾಗಿ ತೃತೀಯ ಲಿಂಗಿಗಳಿಂದ ಹೈಕೋರ್ಟ್ ಗೆ ಮನವಿ

ಪ್ರತ್ಯೇಕ ಹಾಸ್ಟೆಲ್ ಗಾಗಿ ತೃತೀಯ ಲಿಂಗಿಗಳಿಂದ ಹೈಕೋರ್ಟ್ ಗೆ ಮನವಿ

0

ಬೆಂಗಳೂರು: ಉನ್ನತ ಶಿಕ್ಷಣ ಮಾಡುವ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ನಿಯಮದಂತೆ ಹಾಸ್ಟೆಲ್ ವ್ಯವಸ್ಥೆ ಒದಗಿಸಲು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ನಿರ್ದೇಶನ ಕೋರಿ ರಾಜ್ಯದ ಪ್ರಥಮ ತೃತೀಯ ಲಿಂಗಿ ವೈದ್ಯೆ ಡಾ. ತ್ರಿನೇತ್ರಾ ಹಲ್ದಾರ್ ಗುಮ್ಮರಾಜು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯಪೀಠ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ (ಯುಜಿಸಿ) ನೋಟಿಸ್ ಜಾರಿಗೊಳಿಸಿದೆ.

 ಅರ್ಜಿದಾರರ ವಾದ ಆಲಿಸಿದ ಬಳಿಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಹಾಗೂ ಯುಜಿಸಿಗೆ ನೋಟಿಸ್ ಜಾರಿಗೊಳಿಸಿತು. ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೂ ತುರ್ತು ನೋಟಿಸ್ ಜಾರಿಗೊಳಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಜೂ.6ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಕೀಲರು, ಸಾಮಾನ್ಯ ಹಾಸ್ಟೆಲ್‌ಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಾಕಷ್ಟು ಕಿರುಕುಳ ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಸಾಕಷ್ಟು ಮಂದಿ ಉನ್ನತ ಶಿಕ್ಷಣ ಪೂರೈಸದೆ ಅರ್ಧಕ್ಕೇ ವಿದ್ಯಾಭ್ಯಾಸ ಕೈಬಿಡುತ್ತಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.

ರಾಜ್ಯದಲ್ಲಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಗಾಗಿ ಯಾವುದೇ ನಿರ್ಧಿಷ್ಟ ನಿಯಮ ರೂಪಿಸಲಾಗಿಲ್ಲ. 2020ರ ಅಧಿನಿಯಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಶಿಕ್ಷಣವನ್ನೂ ಸೇರಿಸಲಾಗಿದೆ. ಹೀಗಿದ್ದರೂ, ಉನ್ನತ ಶಿಕ್ಷಣ ಮಾಡುವ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಒದಗಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಅವರೇ ಆಯ್ದುಕೊಂಡ ಲಿಂಗದ ಆಧಾರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲು ನಿರಾಕರಿಸುವುದು ಸಂವಿಧಾನದ ಪರಿಚ್ಛೇದ 14,15, ಮತ್ತು 21ರ ಉಲ್ಲಂಘನೆಯಾಗಲಿದೆ. ಆದ್ದರಿಂದ, ಹಾಸ್ಟೆಲ್‌ಗಳ ಪ್ರವೇಶ ಅರ್ಜಿಯಲ್ಲಿ ಪುರುಷ/ಸ್ತ್ರೀ ಲಿಂಗಗಳ ಜತೆಗೆ ತೃತೀಯ ಲಿಂಗಿಗಳಿಗೂ ಆಯ್ಕೆ ಕಲ್ಪಿಸಲು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೂ ಸುತ್ತೋಲೆ ಅಥವಾ ಆದೇಶ ಹೊರಡಿಸಲು ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.