ಗದಗ: ರಸ್ತೆ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ನಗರಸಭೆ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಗದಗ-ಬೆಟಗೇರಿ ನಗರಸಭೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುವ ಕಾಟೇವಾಲ ಎಂಬುವವರೇ ಲೋಕಾಯುಕ್ತರ ಬಲೆಗೆ ಬಿದ್ದವರು.
ಗುತ್ತಿಗೆದಾರ ಅಬ್ದುಲ್ ಮನಿಯಾರ್ ಎಂಬುವರ ಒಂಬತ್ತು ಲಕ್ಷ ರೂ. ಮೊತ್ತದ ಮೂರು ಬಿಲ್ ಪಾಸ್ ಮಾಡಲು ಒಂದೂವರೆ ಲಕ್ಷ ಹಣ ಕೇಳಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತರ ತಂಡ ದಾಳಿ ಮಾಡಿ ಹಣ ಸಮೇತ ವಶಕ್ಕೆ ಪಡೆದಿದ್ದಾರೆ.
ಲಂಚ ಪಡೆದ ಇಂಜಿನಿಯರ್ ಕಾಟೇವಾಲ ಅವರು, ಹಣವನ್ನು ಬೈಕಿನಲ್ಲಿ ಇಟ್ಟಿದ್ದರು. ನಂತರ ಲೋಕಾಯುಕ್ತರಿಗೆ ಹಣ ಹಸ್ತಾಂತರ ಮಾಡಿದ್ದಾರೆ.
ಲೋಕಾಯುಕ್ತ ಎಸ್’ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್’ಪಿ ಶಂಕರ ಎಮ್ ರಾಗಿ ಅವರ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರಗಳಾದ ರವಿ ಪುರುಷೋತ್ತಮ್, ಅಜೀಜ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ಸಿಬ್ಬಂದಿಗಳಾದ ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಮುತ್ತುರೆಡ್ಡಿ ಬಾರಡ್ಡಿ, ಗುಬ್ಬಿ, ಅಯ್ಯನಗೌಡರ, ವಿರೂಪಾಕ್ಷ ಅರಿಷಿಣದ ಹಾಗೂ ವಾಹನ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಈ ಕಾರ್ಯಾಚರಣೆಯಲ್ಲಿ ಇದ್ದರು.














