ಮನೆ ರಾಜಕೀಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಸಚಿವ ಈಶ್ವರಪ್ಪ

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಸಚಿವ ಈಶ್ವರಪ್ಪ

0

ಶಿವಮೊಗ್ಗ(Shivamogga): ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಮೃತಪಟ್ಟಿರುವ ಸಂತೋಷ್ ಪಾಟೀಲ್ ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ, ವಾಟ್ಸಾಪ್ ನಲ್ಲಿ ಸಂದೇಶ ಬರೆದಿದ್ದಾರಷ್ಟೆ, ಅವರು ಆರೋಪ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

ನಾನು  ಸಂತೋಷ್ ಪಾಟೀಲ್ ಮುಖ ಕೂಡ ನೋಡಿಲ್ಲ, ಅಂಥದ್ದರಲ್ಲಿ 80 ಬಾರಿ ನೋಡಿದ್ದೇನೆ, ಭೇಟಿಯಾಗಿದ್ದೇನೆ ಎಂದು ಹೇಗೆ ಹೇಳಿದ್ದಾರೋ ಗೊತ್ತಿಲ್ಲ, ಅವರು ದೆಹಲಿಯಲ್ಲಿ ಹೋಗಿ ಸುದ್ದಿಗೋಷ್ಠಿ ನಡೆಸಲು ವಿಮಾನ ಟಿಕೆಟ್ ಬುಕ್ ಮಾಡಿ ಕೊಟ್ಟವರ್ಯಾರು ಎಂದು ಕೇಳಿದರು.

ಸಿದ್ದರಾಮಯ್ಯ ನೇತೃತ್ವ ಸರ್ಕಾರದಲ್ಲಿ ಡಿವೈಎಸ್ಪಿ ಗಣಪತಿ ವಿಡಿಯೊ ಮಾಡಿದ್ದರು, ಸಂತೋಷ್ ಪಾಟೀಲ್ ಪ್ರಕರಣದಲ್ಲಿ ವಿಡಿಯೊ ಮಾಡಿಲ್ಲ, ಡೆತ್ ನೋಟ್ ಬರೆದಿಲ್ಲ, ಕೇವಲ ಅವರು ಬರೆದಿದ್ದರು ಎನ್ನುವ ಸಂದೇಶ ಹರಿದಾಡುತ್ತಿದೆ, ಈ ಪ್ರಕರಣ ಬಗ್ಗೆ ಅಮೂಲಾಗ್ರ ತನಿಖೆಯಾಗಬೇಕು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂತೋಷ್ ಪಾಟೀಲ್ ಸಾವಿನ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಷಡ್ಯಂತ್ರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.