ಮನೆ ರಾಜ್ಯ ಆಕ್ಷೇಪಾರ್ಹ ಪದ ಬಳಕೆ: ನಟ ಉಪೇಂದ್ರ ವಿರುದ್ಧ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ

ಆಕ್ಷೇಪಾರ್ಹ ಪದ ಬಳಕೆ: ನಟ ಉಪೇಂದ್ರ ವಿರುದ್ಧ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ

0

ಬೆಂಗಳೂರು: ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್.ಸಿ‌ ಮಹದೇವಪ್ಪ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ ಎಂದು  ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ.

ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಆ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯನ್ನು ಅವರು ಅರಿಯಬೇಕು.

ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ  ಎಂದು ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ ಮಹದೇವಪ್ಪ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.