ಮನೆ ಅಪರಾಧ ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

0

ಮೈಸೂರು: ಚಾಮುಂಡಿಪುರಂನಲ್ಲಿರುವ ಬಾಡಿಗೆ ಮನೆಯಲ್ಲಿ ಭಾನುವಾರ ಮಧ್ಯಾಹ್ನ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.

ಬರಡನಪುರ ನಿವಾಸಿ ಮಹದೇವಸ್ವಾಮಿ(45) ಆರ್‌ಎಂಸಿಯಲ್ಲಿ ದಲ್ಲಾಳಿಯ ಕೆಲಸ ಮಾಡುತ್ತಿದ್ದರು. ಪತ್ನಿ ಅನಿತಾ(38) ಕರಣನಕುಪ್ಪೆ, ಹುಣಸೂರು ಹೋಬಳಿ ನಿವಾಸಿ. 15 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿ 2 ಹೆಣ್ಣು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪುತ್ರಿಯರಾದ ಚಂದ್ರಕಲಾ (17) ಮತ್ತು ಧನಲಕ್ಷ್ಮಿ (15)  ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಬಾಗಿಲು ತೆರೆಯದಿರುವುದನ್ನು ಗಮನಿಸಿದ ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದು ತಿಳಿದು ಬಂದಿಲ್ಲ.

 “ಮುಂಭಾಗದ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಲಾಗಿತ್ತು. ಹೀಗಾಗಿ ಹಿಂಬದಿಯ ಬಾಗಿಲು ತೆರೆದು ನೋಡಿದಾಗ ನಾಲ್ವರು ಮೃತಪಟ್ಟಿರುವುದು ಕಂಡು ಬಂದಿದೆ. ನಾಲ್ವರಲ್ಲಿ ಒಬ್ಬಾಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆ ಹಿರಿಯ ಮಗಳು ಎಂದು ತಿಳಿದುಬಂದಿದೆ. ಇನ್ನು ಕೆಲವರು ನೆಲದ ಮೇಲೆ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಟ್ಟಡದ ಮಾಲಕರು ಮೊದಲ ಮಹಡಿಯಲ್ಲಿ ವಾಸವಾಗಿದ್ದು ಮೃತರ ಕುಟುಂಬವು ನೆಲ ಅಂತಸ್ತಿನಲ್ಲಿ ಕಳೆದ ಎರಡು ತಿಂಗಳಿಂದ ಬಾಡಿಗೆದಾರರಾಗಿ ವಾಸಿಸುತ್ತಿತ್ತು ಎಂದು ತಿಳಿದು ಬಂದಿದೆ.

ಹಲವು ಆಯಾಮಗಳಲ್ಲಿ ಪ್ರಕರಣವನ್ನು ತನಿಖೆ ಮಾಡಲಾಗುತ್ತಿದೆ.