ಮನೆ ರಾಜ್ಯ ಬಿಜೆಪಿಗೆ ಸೆಡ್ಡು ಹೊಡೆದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಎಸ್ ಟಿ ಸೋಮಶೇಖರ್

ಬಿಜೆಪಿಗೆ ಸೆಡ್ಡು ಹೊಡೆದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಎಸ್ ಟಿ ಸೋಮಶೇಖರ್

0

ಬೆಂಗಳೂರು: ಬೆಂಗಳೂರಿನ ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ತಮ್ಮ ಕ್ಷೇತ್ರದಲ್ಲಿ ಗೃಹಲಕ್ಷ್ಮೀ ಹಬ್ಬ ಆಚರಿಸಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿರುವ ಬೆನ್ನಲ್ಲೇ ಸೋಮಶೇಖರ್​ ಗೃಹಲಕ್ಷ್ಮೀ ಯೋಜನೆ ಚಾಲನೆ ನೀಡಿರುವುದು ಬಿಜೆಪಿಗೆ ಇರುಸುಮುರುಸು ಉಂಟುಮಾಡಿದಂತಾಗಿದೆ.

ಮೊನ್ನೆಯಷ್ಟೇ ಗೃಹಲಕ್ಷ್ಮೀ ಯೋಜನೆ ಸಂಬಂಧ ಪೂರ್ವಭಾವಿ ಸಭೆ ನಡೆಸಿದ್ದ ಸೋಮಶೇಖರ್, ಯಶಸ್ವಿಗಾಗಿ ಕ್ಷೇತ್ರದಲ್ಲಿ ತಯಾರಿ ನಡೆಸಿದ್ದರು. ಅದರಂತೆ ಇವತ್ತು ಅತ್ತ ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಯಶವಂತಪುರ ಕ್ಷೇತ್ರದಲ್ಲೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಯ್ತು. ಕಾರ್ಯಕ್ರಮಗಳ ವೀಕ್ಷಣೆಗೆ ಎಲ್‌ ಇಡಿ ಪರದೆಗಳನ್ನ ಅಳವಡಿಸಲಾಗಿತ್ತು.

ಈ ವೇಳೆ ಮಾತನಾಡಿದ ಎಸ್ ಟಿ ಸೋಮಶೇಖರ್, ಗೃಹಲಕ್ಷ್ಮೀ ಯೋಜನೆ ಜಾರಿಗೆ ನನ್ನದು ಕೂಡಾ ಒಂದು ಅಳಿಲು ಸೇವೆ ಇದೆ. ನನ್ನ ಕ್ಷೇತ್ರದಲ್ಲೂ ಯೋಜನೆ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಇದು ಅರೆಬೆಂದ ಯೋಜನೆ ಎಂದು ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಬೊಮ್ಮಾಯಿ ದೊಡ್ಡವರು. ಏನುಬೇಕಾದರೂ ಮಾತಾಡಲಿ. ಇದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮ. ​ಇದು ಸರ್ಕಾರದ ಯೋಜನೆ, ಮಹಿಳೆಯರಿಗೆ 2 ಸಾವಿರ ರೂ. ಸಿಗುತ್ತದೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ನ್ಯೂನತೆ ನನಗೆ ಕಾಣುತ್ತಿಲ್ಲ. ಸರ್ಕಾರದ ಯೋಜನೆ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡಿದ್ದೇನೆ. ಯೋಜನೆ ಜನರಿಗೆ ತಲುಪಿಸಲು ಏನು ಬೇಕೋ ಅದನ್ನು ಮಾಡಿರುವೆ ಎಂದು ತಿಳಿಸಿದರು.