ಮನೆ ರಾಜ್ಯ ವಕೀಲರು ಮತ್ತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ನಿರ್ಧಾರ: ಪ್ರಜ್ವಲ್ ರೇವಣ್ಣ

ವಕೀಲರು ಮತ್ತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ನಿರ್ಧಾರ: ಪ್ರಜ್ವಲ್ ರೇವಣ್ಣ

0

ಹಾಸನ: 2019ರ ಲೋಕಸಭೆ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಆಸ್ತಿ ವಿವರ ಸಲ್ಲಿಸುವಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಪ್ರಕರಣದಲ್ಲಿ ಹೈಕೋರ್ಟ್​ ನ್ಯಾ. ಕೆ.‌ ನಟರಾಜನ್ ಪೀಠ ಸಂಸತ್​ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅವರನ್ನು ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.

ಪ್ರಜ್ವಲ್ ರೇವಣ್ಣ ಅವರಿಗೆ ಒಂದು ತಿಂಗಳು ಕಾಲವಕಾಶವಿದ್ದು, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಬಹುದಾಗಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂನಿಂದ ತಡೆ ತರಬಹುದು. ಒಂದು ವೇಳೆ ತಡೆಯಾಜ್ಞೆ ನೀಡದಿದ್ದರೆ ಆಯ್ಕೆ ಅಸಿಂಧು ಆಗಲಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ 265 ಎಕರೆ ಜಮೀನು ಘೋಷಣೆ ಮಾಡಿಲ್ಲ. ಬೇನಾಮಿ ಆಸ್ತಿ ಹೊಂದಿದ್ದಾರೆ, ಆದಾಯ ಮುಚ್ಚಿಟ್ಟಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ಮತದಾನ ಮಾಡಿಸಿದ್ದಾರೆ. ಬೂತ್‌ನಲ್ಲಿ ಕುಳಿತು ಮತ ಹಾಕಿಸಿದ್ದಾರೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುದೀರ್ಘ 4 ವರ್ಷ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ತೀರ್ಪು ನೀಡಿದೆ.

ಈ ಬಗ್ಗೆ ಶಾಸಕ ಎ ಎಂಜು ಮತ್ತು ದೇವರಾಜೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಯಾರು ಸುಳ್ಳು ಮಾಹಿತಿ ಕೊಡಬಾರದು ಎಂದಿದ್ದಾರೆ. ಕಾನೂನಿಗೆ ತಲೆಬಾಗೋದಾಗಿ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್.ಡಿ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. ಇದೀಗ ಅನರ್ಹ ಸಂಸದ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ.

ತೀರ್ಪಿನ ಪ್ರತಿಯನ್ನು ಅಧ್ಯಯನ ಮಾಡಿದ ನಂತರವೇ ಪ್ರತಿಕ್ರಿಯಿಸುವುದಾಗಿ ಅನರ್ಹ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್, ವಕೀಲರು ಮತ್ತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮವನ್ನು ನಿರ್ಧರಿಸುತ್ತೇನೆ. ಈ ಬಗ್ಗೆ ತಾತ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೊಂದಿಗೂ ಚರ್ಚಿಸುತ್ತೇನೆ ಎಂದರು.