ಮನೆ ಮನರಂಜನೆ ಅಕ್ಟೋಬರ್‌ 27ಕ್ಕೆ ‘ಇನಾಮ್ದಾರ್‌’ ಚಿತ್ರ ತೆರೆಗೆ

ಅಕ್ಟೋಬರ್‌ 27ಕ್ಕೆ ‘ಇನಾಮ್ದಾರ್‌’ ಚಿತ್ರ ತೆರೆಗೆ

0

ನಿರಂಜನ್‌ ಶೆಟ್ಟಿ ತಲ್ಲೂರು ನಿರ್ಮಾಣದ, ಸಂದೇಶ್‌ ಶೆಟ್ಟಿ ಆಜ್ರಿ ನಿರ್ದೇಶನದ ” ಇನಾಮ್ದಾರ್‌’ ಸಿನಿಮಾದ ಟ್ರೇಲರ್‌ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಯಿತು. ನಟರಾದ ನಿರಂಜನ್‌ ಶೆಟ್ಟಿ, ಪ್ರಮೋದ್‌ ಶೆಟ್ಟಿ, ಉದ್ಯಮಿ ಕರುಣಾಕರ ರೆಡ್ಡಿ, ಎಂ. ಕೆ. ಮಠ ಮುಂತಾದವರು ಸಿನಿಮಾದ ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ” ಇನಾಮ್ದಾರ್‌’ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ, “ಈ ಸಿನಿಮಾದಲ್ಲಿ ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ “ಇನಾಮ್ದಾರ್‌’ ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣಸಂಘರ್ಷದ ಕಥೆಯನ್ನು ಹೇಳಲಾಗಿದೆ’ ಎಂದು ಮಾಹಿತಿ ನೀಡಿದರು.

ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಾಯಕನಾಗಿ ರಂಜನ್‌ ಛತ್ರಪತಿ, ನಾಯಕಿಯರಾಗಿ ಚಿರಶ್ರೀ ಅಂಚನ್‌ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಎಸ್ತಾರ್‌ ನೊರೋನ್ಹಾ, ಸಂದೇಶ್‌ ಶೆಟ್ಟಿ ಆಜ್ರಿ, ರಂಗಭೂಮಿ ಕಲಾವಿದ ಹಿನ್ನಲೆಯ ಪ್ರಮೋದ್‌ ಶೆಟ್ಟಿ, ಎಂ.ಕೆ.ಮಠ, ಥ್ರಿಲ್ಲರ್‌ ಮಂಜು, ಶರತ್‌ ಲೋಹಿತಾಶ್ವ, ಅವಿನಾಶ್‌, ರಘು ಪಾಂಡೇಶ್ವರ್‌ ಮತ್ತಿತರರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.