ಮನೆ ರಾಜ್ಯ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ

ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ

0

ಚಾಮರಾಜನಗರ: ದೀಪಾವಳಿ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಸಂಚಾರ ದಟ್ಟಣೆಯಿಂದ ಬೆಟ್ಟದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಆರಂಭಗೊಂಡ ದೀಪಾವಳಿ ಜಾತ್ರೆ ನವೆಂಬರ್ 14 ರ ವರೆಗೆ ನಡೆಯಲಿದ್ದು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರವು ಮಹಾ ರಥೋತ್ಸವಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಮಹದೇಶ್ವರನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ದಾಸೋಹಾ ಕೂಡ ಇರಲಿದೆ.

ಐದು ದಿನಗಳ ಕಾಲ ನಡೆಯುವ ಮಹದೇಶ್ವರನ ಈ ಜಾತ್ರೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಅದರಲ್ಲೂ ಬೆಂಗಳೂರು ಹಾಗೂ ಮೈಸೂರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಹೀಗಾಗಿ ಕಿರಿದಾದ ರಸ್ತೆಯಲ್ಲಿ ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯಿಂದ ಬೆಟ್ಟದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್​ ಅವರು ಆದೇಶ ಹೊರಡಿಸಿದ್ದಾರೆ.

ಅಲ್ಲದೆ, ದ್ವಿಚಕ್ರ ವಾಹನ, ಆಟೋಗಳನ್ನು ತಾಳುಬೆಟ್ಟದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ, ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲಾ ಡಿಪೋಗಳಿಂದ ಸುಮಾರು 500ಕ್ಕೂ ಹೆಚ್ಚು ಬಸ್ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.