ಮನೆ ರಾಜ್ಯ ಉಡುಪಿ ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವಿನ ಆರೋಪ: ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ

ಉಡುಪಿ ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವಿನ ಆರೋಪ: ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ

0

ಉಡುಪಿ: ಸರಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಆಸ್ಪತ್ರೆಯ ಎದುರು ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ.

ಕುಂದಾಪುರ ಸರಕಾರಿ ಆಸ್ಪತ್ರೆ ಮುಂದೆ ಅಹೋ ರಾತ್ರಿ ಪ್ರತಿಭಟನೆ ನಡೆಸಲಾಗುತ್ತಿದೆ.

ನವೆಂಬರ್ 17 ರಂದು ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಅವರ ಹೆಂಡತಿ ಜ್ಯೋತಿ ಅವರು ದಾಖಲಾಗಿದ್ದರು. ನಿನ್ನೆ ಬೆಳಿಗ್ಗೆ ಹೆರಿಗೆ ಮಾಡಿದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಅಕ್ರೋಶಗೊಂಡ ಕುಟುಂಬಸ್ಥರು ನಿನ್ನೆ ತಡರಾತ್ರಿಯಿಂದ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಬೇಕು, ಡಿಸಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಹೊಕ್ಕುಳ ಬಳ್ಳಿ ಸುತ್ತಿಕೊಂಡು ಮಗುವಿನ ಸಾವಾಗಿದೆ ಎಂದು ವೈದ್ಯರು ಉಡಾಫೆಯಾಗಿ ಮಾತಾಡಿದ್ದಾರೆ. ಹೆರಿಗೆ ಸಂದರ್ಭದಲ್ಲಿ ರಕ್ತಸ್ರಾವವಿದೆ ಎಂದರೂ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಕುಟುಂಬಸ್ಥರು ವೈದ್ಯರ ಮೇಲೆ ಆರೋಪ ಮಾಡಿದ್ದಾರೆ. ಎಂಟೂವರೆ ತಿಂಗಳಿನಿಂದ ಸ್ಕ್ಯಾನಿಂಗ್ ಮಾಡಲು ಒಪ್ಪದ ಡಾಕ್ಟರ್ ವಿರುದ್ಧ ಮನೆಯವರು ಆಕ್ರೋಶ ಹೊರ ಹಾಕಿದ್ದಾರೆ. ಇಡೀ ರಾತ್ರಿ ಕುಂದಾಪುರ ಸರಕಾರಿ ಆಸ್ಪತ್ರೆ ಮುಂದೆ ಕುಳಿತು ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ.

ಇನ್ನು ಸ್ಥಳಕ್ಕೆ ಬಂದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕೂಡ ವೈದ್ಯರ ನಿರ್ಲಕ್ಷ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಡಿಎಚ್ ಓ, ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋ ಅವರು ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದು, ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ.

ಅಧಿಕಾರಿಗಳ ಯಾವ ಮಾತಿಗೂ ಜಗ್ಗದ ಪ್ರತಿಭಟನಾಕಾರರು ಪ್ರಕರಣದ ಸಂಪೂರ್ಣ ತನಿಖೆ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ.