ಮನೆ ರಾಜ್ಯ ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲು: ಎಂ ಬಿ ಪಾಟೀಲ

ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲು: ಎಂ ಬಿ ಪಾಟೀಲ

0

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನಿವೇಶನ ಪಡೆದುಕೊಂಡು, ದಶಕಗಳಿಂದ ಹಾಗೆಯೇ ಉಳಿಸಿಕೊಂಡಿದ್ದ ಹಲವರಿಂದ ಕಳೆದ ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲಿ ಮಾಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ಕೆಐಎಡಿಬಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯು ಕೈಗೊಂಡಿರುವ ವಿವಿಧ ಉಪಕ್ರಮಗಳು ಮತ್ತು ಅನುಸರಣ ಕಾರ್ಯಗಳ ಪರಾಮರ್ಶೆ ನಡೆಸಿದರು.

ಬಳಿಕ ಮಾತನಾಡಿದ ಅವರು, `ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಗಳನ್ನು ಪಡೆದುಕೊಂಡಿದ್ದ ಹಲವರು ಹತ್ತಿಪ್ಪತ್ತು ವರ್ಷಗಳಿಂದ ಹಾಗೆಯೇ ಉಳಿಸಿಕೊಂಡಿದ್ದರು. ಇದರ ಬಾಬತ್ತು ಬೊಕ್ಕಸಕ್ಕೆ 2,400 ಕೋಟಿ ರೂ. ಬಾಕಿ ಬರಬೇಕಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಬಾಕಿ ವಸೂಲಿ ಮಾಡುವಂತೆ ಮೂರ್ನಾಲ್ಕು ವಾರಗಳ ಹಿಂದೆ ಮಂಡಲಿಯ  ನಿರ್ದೇಶಕರುಗಳಿಗೆ ಸೂಚಿಸಲಾಗಿತ್ತು. ಇದರ ನಂತರ ಕ್ಷಿಪ್ರ ಗತಿಯಲ್ಲಿ 115 ಕೋಟಿ ರೂ. ವಸೂಲು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಈ ವಸೂಲಿ ಕ್ರಮವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.

ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಕ್ಷಿಪ್ರ ಗತಿಯಲ್ಲಿ ಸಾಗುತ್ತಿದ್ದು, 2024ರ ಫೆಬ್ರವರಿಯಲ್ಲಿ ಉದ್ಘಾಟಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ, ಕೇಂದ್ರ ಸರಕಾರದ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅಗತ್ಯವಿರುವ ಅನುಮೋದನೆಗಳನ್ನೆಲ್ಲ ಪಡೆದುಕೊಳ್ಳಬೇಕು. ಜೊತೆಗೆ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇನ್ನು ಒಂದು ತಿಂಗಳಲ್ಲಿ ರಾತ್ರಿ ಹೊತ್ತಿನಲ್ಲೂ ವಿಮಾನ ಸೇವೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಹಾಸನ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿಗಳ ಕಡೆಗೆ ಆದ್ಯತೆ ಕೊಡಲಾಗುವುದು. ಕಾರವಾರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಒಂದಿಷ್ಟು ಬಾಕಿ ಇದ್ದು, ಇದನ್ನು ತ್ವರಿತಗೊಳಿಸಲಾಗುವುದು. ಬಜೆಟ್ಟಿನಲ್ಲಿ ಧರ್ಮಸ್ಥಳ, ಚಿಕ್ಕಮಗಳೂರು, ಕೊಡಗುಗಳಲ್ಲಿ ಏರ್-ಸ್ಟ್ರಿಪ್ಸ್ ನಿರ್ಮಾಣ ಘೋಷಿಸಲಾಗಿದ್ದು, ಅದನ್ನು ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಮೂಲಕ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

ಉತ್ತರ ಕನ್ನಡದ ತಡದಿಯನ್ನು ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ಪಾಟೀಲ ನುಡಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ‌ ಡಾ.ಮಹೇಶ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.