ಮನೆ ಕಾನೂನು ಶ್ರೀರಂಗಪಟ್ಟಣದ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಮದರಾಸ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಶ್ರೀರಂಗಪಟ್ಟಣದ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಮದರಾಸ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

0

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಮದರಾಸವನ್ನು ತಡೆಹಿಡಿಯಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅಭಿಷೇಕ್‌ ಗೌಡ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠವು ಕೇಂದ್ರ ಸಂಸ್ಕೃತಿ ಸಚಿವಾಲಯ, ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣಾ ಇಲಾಖೆಯ ಮಹಾ ನಿರ್ದೇಶಕರು, ಕರ್ನಾಟಕ ಕಂದಾಯ ಇಲಾಖೆ ಮತ್ತು ಮಂಡ್ಯ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲೇನಿದೆ ?:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪ್ರಸಿದ್ಧ ಪ್ರವಾಸ ತಾಣವಾಗಿದೆ. ಶ್ರೀರಂಗಪಟ್ಟಣದ ಜುಮ್ಮಾ ಮಸೀದಿಯನ್ನು ಮೈಸೂರು ಅರಸ ಟಿಪ್ಪು ಸುಲ್ತಾನ್‌ ತನ್ನ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಇದರಿಂದ ಈ ಮಸೀದಿಯನ್ನು ಐತಿಹಾಸಿಕ ಮತ್ತು ಪ್ರಾಚೀನ ಸ್ಮಾರಕ ಎಂಬುದಾಗಿ ಭಾರತೀಯ ಸರ್ವೇಕ್ಷಣಾ ಇಲಾಖೆ ಘೋಷಿಸಿ, ಸಂರಕ್ಷಣೆ ಮಾಡುತ್ತಿದೆ. ಆದರೆ, ಈ ಸ್ಮಾರಕದ ಒಳಗೆ ಅನಧಿಕೃತವಾಗಿ ವಸತಿ ಮದರಸಾ ನಡೆಸಲಾಗುತ್ತಿದೆ. ಅಲ್ಲಿ ಸುಮಾರು 50-60 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಾ, ಅಲ್ಲಿಯೇ ತಂಗಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಅಲ್ಲದೇ, ಮಸೀದಿ ಆವರಣದಲ್ಲಿಯೇ ವಿದ್ಯಾರ್ಥಿಗಳಿಗೆ ಹಾಗೂ ಮದಸರ ಸಿಬ್ಬಂದಿಗೆ ಅಡುಗೆ ಮಾಡಲಾಗುತ್ತಿದೆ. ಶೌಚಾಲಯ, ಸ್ನಾನ ಗೃಹ, ವಿಶ್ರಾಂತಿ ಕೋಣೆ, ಅಡುಗೆ ಮನೆ ನಿರ್ಮಿಸಲಾಗಿದೆ. ಬಟ್ಟೆಗಳನ್ನು ಶುಚಿಗೊಳಿಸಿ ಒಣಗಿ ಹಾಕಲಾಗುತ್ತಿದೆ. ಹಲವು ತಾತ್ಕಾಲಿಕ ಕಟ್ಟಡ ನಿರ್ಮಿಸಿ, ಸ್ಮಾರಕವನ್ನು ಹಾನಿ ಮಾಡಲಾಗಿದೆ. ಇದು ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ಜಾಗಗಳು, ಉಳಿಕೆಗಳ ಕಾಯ್ದೆ-1958ರ ಸೆಕ್ಷನ್‌ 7, 8 ಮತ್ತು 16ರ ಸ್ಪಷ್ಟ ಉಲ್ಲಂಘನೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲ ವಿಚಾರಗಳು ಕೇಂದ್ರ ಸರ್ಕಾರ, ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣಾ ಇಲಾಖೆ, ರಾಜ್ಯ ಸರ್ಕಾರದ ಅಣತಿಯಂತೆ ನಡೆಯುತ್ತಿದೆ. ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಪೊಲೀಸರಿಗೆ ದೂರು ಸಲ್ಲಿಸಿ, ಮಸೀದಿಯಲ್ಲಿನ ಒತ್ತುವರಿ ತೆರವುಗೊಳಿಸಲು 2022ರ ಮೇ 20ರಂದು ಮನವಿ ಪತ್ರ ನೀಡಿದ್ದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಕೂಡಲೇ ಜುಮ್ಮ ಮಸೀದಿಯಲ್ಲಿ ಮದರಸ ನಡೆಸುತ್ತಿರುವುದನ್ನು ತಡೆ ಹಿಡಿಯಬೇಕು.ಮಸೀದಿಯನ್ನು ಪ್ರಾಚೀನ ಸ್ಮಾರಕವಾಗಿ ಸಂರಕ್ಷಣೆ ಮಾಡಬೇಕು. ಮಸೀದಿಯಲ್ಲಿ ನಿರ್ಮಿಸಲಾಗಿರುವ ಎಲ್ಲ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.